ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಅನೇಕ ತಿಂಗಳುಗಳ ಕಾಲ ಶಾಲೆ-ಕಾಲೇಜುಗಳು ಬಂದ್ ಆಗಿದ್ದವು. ಇದರಿಂದ ವಿದ್ಯಾರ್ಥಿಗಳ ಅನಾನುಕೂಲತೆ ತಪ್ಪಿಸಲು ಶಿಕ್ಷಣ ಸಚಿವರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ಮಂಗಳೂರು (ಫೆ.28): ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಶೇ.70ರಷ್ಟುಪಠ್ಯವನ್ನು ನಿಗದಿಪಡಿಸಲಾಗಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಓದಲೇ ಬೇಕಾಗಿರುವ ಪಠ್ಯ ವಿಷಯಗಳನ್ನು ಶೇ.70ರಷ್ಟುಭಾಗದಲ್ಲಿ ಒಳಪಡಿಸಲಾಗಿದೆ ಎಂದರು.
ಶುಲ್ಕ ರಿಯಾಯ್ತಿಗೆ ಶೀಘ್ರದಲ್ಲೇ ಸೂತ್ರ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ಶೇ.30 ಶುಲ್ಕ ರಿಯಾಯ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ತೀರ್ಮಾನವನ್ನು ಪ್ರಶ್ನಿಸಿ ಖಾಸಗಿ ಶಾಲೆಯವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಶುಲ್ಕ ರಿಯಾಯ್ತಿಗೆ ಸಂಬಂಧಿಸಿದ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಒಂದು ಸೂತ್ರ ಕಂಡುಹಿಡಿಯುತ್ತೇವೆ ಎಂದು ಹೇಳಿದರು.
'9, 10, 11ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ಎಲ್ಲಾ ವಿದ್ಯಾರ್ಥಿಗಳು ಪಾಸ್
ಶಾಲಾ ಶುಲ್ಕದ ಸಮಸ್ಯೆಗೆ ಪೋಷಕರು ಮತ್ತು ಶಿಕ್ಷಣ ಸಂಸ್ಥೆಯವರು ಪರಸ್ಪರ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬರಬೇಕಿತ್ತು. ಇದು ನಡೆಯದ ಕಾರಣ ಸರ್ಕಾರವೇ ಶುಲ್ಕ ರಿಯಾಯ್ತಿ ತೀರ್ಮಾನ ಮಾಡಿತ್ತು. ಈಗಾಗಲೇ ಶುಲ್ಕ ಪಾವತಿಸಿದ ವಿದ್ಯಾರ್ಥಿಗಳ ಮುಂದಿನ ವರ್ಷದ ಶುಲ್ಕದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇರಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಕರ್ನಾಟಕ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಲಹಾ ಸಮಿತಿ ಕಾಲಕಾಲಕ್ಕೆ ನೀಡಿದ ಸಲಹೆ ಆಧರಿಸಿ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ. ಇಲ್ಲಿನ ಪರಿಸ್ಥಿತಿ ಬಗ್ಗೆ ಸ್ಥಳೀಯ ಅಧಿಕಾರಿಗಳ ಜತೆ ಮಾತುಕತೆ ನಡೆಸುವುದಾಗಿ ಹೇಳಿದರು.