ಬಹುದಿನಗಳಿಂದ ಕ್ಲೋಸ್ ಆಗಿರುವ ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಬೆಂಗಳೂರು, (ಡಿ.09): ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಕುರಿತು ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧಾರಕ್ಕೆ ಬರಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞ ಸಮಿತಿಯೊಂದಿಗೂ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.

SSLC, PUC ತರಗತಿ ಪ್ರಾರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸುರೇಶ್ ಕುಮಾರ್

ಮಕ್ಕಳು ಬಹುಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಸಮಾಜದ ಮೇಲೆ ಆಗಿರುವ ಪರಿಣಾಮಗಳು ಸರ್ಕಾರದ ಗಮನಕ್ಕೂ ಬಂದಿದೆ. ಮಕ್ಕಳ ಭವಿಷ್ಯವೂ ಇದರಲ್ಲಿ ಅಡಗಿರುವುದರಿಂದ ಬಹುಕಾಲ ಮಕ್ಕಳನ್ನು ಶಾಲೆಯಿಂದ ಹೊರಗಿಡುವುದು ಸರಿಯಲ್ಲವಾದ್ದರಿಂದ ಮೇಲಿನ ತರಗತಿಗಳ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳನ್ನು ಆರಂಭಿಸಲು ಸರ್ಕಾರ ಸೂಕ್ತ ಚರ್ಚೆಯ ನಂತರ ನಿರ್ಣಯಕ್ಕೆ ಬರಲಿದೆ ಎಂದು ಸಚಿವರು ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯದ ಕುರಿತು ಸರ್ಕಾರ ಯಾವುದೇ ರೀತಿಯಲ್ಲೂ, ಯಾವುದೇ ಸಂದರ್ಭದಲ್ಲೂ ರಾಜಿಗೆ ಮುಂದಾಗದು. ಕೊರೋನಾ ಸೃಷ್ಟಿಸಿದ ವಿಷಮ ಪರಿಸ್ಥಿತಿಯಿಂದಾಗಿ ಸರ್ಕಾರದ ಇದುವರೆಗೂ ಖಚಿತ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ ಎಂದು ತಿಳಿಸಿದರು.

ಶಾಲಾ-ಕಾಲೇಜುಗಳು ಆರಂಭವಾಗದೇ ಇರುವುದರಿಂದ ಪೋಷಕರ ಕಳವಳ, ಮುಂದಿನ ವ್ಯಾಸಂಗಕ್ಕಾಗಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ಕುರಿತ ವಿಚಾರಗಳು ಸರ್ಕಾರದ ಗಮನದಲ್ಲಿವೆ. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಾಗುವುದು ಎಂದು ವಿವರಿಸಿದರು.