*  ನೋಟಿಸ್‌ ಪಡೆದ ಪೈಕಿ ಇಬ್ಬರಿಂದ ಉತ್ತರ*  ಮೂವರು ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರ ಉತ್ತರ *  ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ 

ಮಂಗಳೂರು(ಜೂ.12): ನಗರದ ಹಂಪನಕಟ್ಟೆ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಪ್ರಾಂಶುಪಾಲರು ನೀಡಿದ ನೋಟಿಸ್‌ಗೆ ಮೂವರು ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಉತ್ತರ ನೀಡಿದ್ದು, ಆ ಪೈಕಿ ಒಬ್ಬ ವಿದ್ಯಾರ್ಥಿನಿ ಶನಿವಾರ ಹಿಜಾಬ್‌ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾಳೆ. ಇನ್ನೊಬ್ಬ ವಿದ್ಯಾರ್ಥಿನಿ ನೋಟಿಸ್‌ಗೆ ಉತ್ತರಿಸಿಲ್ಲ.

Add Asianetnews Kannada as a Preferred SourcegooglePreferred

ಹಿಜಾಬ್‌ ಧರಿಸದೇ ತರಗತಿಗಳಿಗೆ ಹಾಜರಾಗಲು 15 ವಿದ್ಯಾರ್ಥಿನಿಯರು ನಿರಾಕರಿಸಿದ್ದರು. ಇದರಿಂದ ಕಾಲೇಜಿನಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ಮೂವರು ವಿದ್ಯಾರ್ಥಿನಿಯರು ಪತ್ರಿಕಾಗೋಷ್ಠಿ ಮಾಡಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಆ ಮೂವರು ವಿದ್ಯಾರ್ಥಿನಿಯರಿಗೆ ಕಾಲೇಜು ವತಿಯಿಂದ ನೋಟಿಸ್‌ ನೀಡಲಾಗಿತ್ತು. ಅವರಲ್ಲಿ ಒಬ್ಬ ವಿದ್ಯಾರ್ಥಿನಿ ಶನಿವಾರ ಹಿಜಾಬ್‌ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾಳೆ.

ಮಂಗ್ಳೂರು ವಿವಿ ಕಾಲೇಜು ವಿವಾದ: ನೋಟಿಸ್‌ಗೆ ಉತ್ತರಿಸದ ಹಿಜಾಬ್‌ ವಿದ್ಯಾರ್ಥಿನಿಯರು

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ, ಪ್ರಸಕ್ತ ವಿವಿ ಕಾಲೇಜಿನಲ್ಲಿ ಬಿಕಾಂ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯುತ್ತಿದೆ. ಹಾಗಾಗಿ ಪದವಿ ತರಗತಿಗಳನ್ನು ಸುಮಾರು 15 ದಿನಗಳ ಕಾಲ ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ. ಸ್ನಾತಕೋತ್ತರ ಪದವಿ ತರಗತಿ ಮಾತ್ರ ಆಫ್‌ಲೈನ್‌ನಲ್ಲಿ ನಡೆಯುತ್ತಿದೆ. ಶನಿವಾರ ಅರ್ಧ ದಿನ ಮಾತ್ರ ತರಗತಿ ಇದ್ದು, ಸೋಮವಾರ ಕೂಡ ಉತ್ತರ ಪತ್ರಿಕೆ ಮೌಲ್ಯಮಾಪನ ಮುಂದುವರಿಯಲಿದೆ. ಹೀಗಾಗಿ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶುಕ್ರವಾರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಯಾವುದೇ ದೂರು ನೀಡಲಾಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.