ಒಂದು ಬಾರಿ ಸ್ನಾತಕೋತ್ತರ ಪದವಿ ಪಡೆಯುವಾಗ ಹಾಸ್ಟೆಲ್‌ ಸೌಲಭ್ಯ ಪಡೆದ ಎಸ್ಸಿ, ಎಸ್ಟಿವಿದ್ಯಾರ್ಥಿಗಳು ಬೇರೊಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಮುಂದಾಗಿ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದರೆ ಸರ್ಕಾರಿ ಆದೇಶದಂತೆ ಅವಕಾಶ ನೀಡಲು ಬರುವುದಿಲ್ಲ

ಬೆಂಗಳೂರು(ಡಿ.04): ಎರಡನೇ ಸ್ನಾತಕೋತ್ತರ ಪದವಿಗೆ ದಾಖಲಾಗುವ ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದರೆ ಕಡ್ಡಾಯವಾಗಿ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದು ಬಾರಿ ಸ್ನಾತಕೋತ್ತರ ಪದವಿ ಪಡೆಯುವಾಗ ಹಾಸ್ಟೆಲ್‌ ಸೌಲಭ್ಯ ಪಡೆದ ಎಸ್ಸಿ, ಎಸ್ಟಿವಿದ್ಯಾರ್ಥಿಗಳು ಬೇರೊಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಮುಂದಾಗಿ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದರೆ ಸರ್ಕಾರಿ ಆದೇಶದಂತೆ ಅವಕಾಶ ನೀಡಲು ಬರುವುದಿಲ್ಲ. ಆದ್ದರಿಂದ ವಿವಿ ವ್ಯಾಪ್ತಿಯ ಎಲ್ಲ ಪ್ರಧಾನ ಕ್ಷೇಮಪಾಲಕರು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆ ಬರೆದುಕೊಂಡು ಪ್ರವೇಶ ನೀಡಬೇಕು ಎಂದು ಕುಲಸಚಿವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ಸಲ್ಲಿ ಎಲ್ಲ ರಸ್ತೆ ಬಂದ್‌ ಇಲ್ಲ...!

ಕುಲಸಚಿವರ ಸ್ಪಷ್ಟನೆ:

ಈ ಬಗ್ಗೆ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಕುಲಸಚಿವ ಮಹೇಶ್‌ ಬಾಬು, ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಷ್ಟೇ ಅಲ್ಲ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ. ಈ ಸುತ್ತೋಲೆಯೂ ಶೀಘ್ರ ಹೊರಬರಲಿದೆ. ಹೈದ್ರಾಬಾದ್‌ ಕರ್ನಾಟಕ ಭಾಗದ ವಿದ್ಯಾರ್ಥಿಗಳು 371 ‘ಜೆ’ ಅಡಿ ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಟೆಲ್‌ ಪ್ರವೇಶಕ್ಕೆ ಅರ್ಜಿ ಸಲ್ಲಿಸುತ್ತಿದ್ದು, ಅವಕಾಶ ಮಾಡಿಕೊಡಬೇಕಿದೆ. ಆದ್ದರಿಂದ ಈ ರೀತಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.