* ಉಪಗ್ರಹ ಉಡಾವಣೆಯಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು* 75ನೇ ಸ್ವಾತಂತ್ರ್ಯ ದಿನಾಚರಣೆಯಂದು ವಿಶಿಷ್ಟ ಸಾಹಸ* ಮಕ್ಕಳಿಗೆ ಲ್ಯಾಪ್‌ಟ್ಯಾಪ್‌ ವಿತರಿಸಿದ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ  

ಬೆಂಗಳೂರು(ಜು.10): ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸ ದಾಖಲೆಯೊಂದಕ್ಕೆ ಸಿದ್ಧರಾಗುತ್ತಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಉಡಾವಣೆಯಾಗಲಿರುವ ಉಪಗ್ರಹ ಯೋಜನೆಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲೇ ಸರ್ಕಾರಿ ಶಾಲೆಯೊಂದು ಈ ರೀತಿಯ ಪ್ರಯೋಗಕ್ಕೆ ಮುಂದಾಗಿರುವುದು ಇದು ಪ್ರಥಮವಾಗಿದೆ.

Add Asianetnews Kannada as a Preferred SourcegooglePreferred

2022 ಆಗಸ್ಟ್‌ 15ರಂದು 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 75 ಉಪಗ್ರಹ ಉಡಾವಣೆ ಮಾಡಲು ದೇಶ ಸಜ್ಜಾಗುತ್ತಿದ್ದು, ಇದರಲ್ಲಿ ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸಹ ಉಪಗ್ರಹವೊಂದರ ಉಡಾವಣೆಯಲ್ಲಿ ಭಾಗವಾಗಲಿದ್ದಾರೆ. ದೇಶದಲ್ಲಿ ಯಾವ ಸರ್ಕಾರಿ ಶಾಲೆಯ ಮಕ್ಕಳಿಗೂ ಲಭಿಸದ ಅವಕಾಶ ಇವರಿಗೆ ಸಿಕ್ಕಿರುವುದು ವಿಶೇಷವಾಗಿದೆ.

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯಿಂದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಮತ್ತೀಕೆರೆ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಕ್ಕಳಿಗೆ ಲ್ಯಾಪ್‌ಟ್ಯಾಪ್‌ ವಿತರಿಸಿದ ನಂತರ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಈ ವಿಷಯ ಪ್ರಕಟಿಸಿದರು.

SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಕೊಟ್ಟ ಸಚಿವ ಸುರೇಶ್‌ ಕುಮಾರ್‌

ಉಪಗ್ರಹ ಉಡಾವಣೆಯಲ್ಲಿ ಎಂಜನಿಯರಿಂಗ್‌ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಸಹಜ. ಆದರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗಿಯಾಗುತ್ತಿರುವುದು ದೇಶದಲ್ಲಿ ಇದೇ ಮೊದಲು. ಇಲ್ಲಿನ ವಿದ್ಯಾರ್ಥಿಗಳ ಜೊತೆಗೆ ಬೇರೆ ಸರ್ಕಾರಿ ಶಾಲೆಯ ಕೆಲ ವಿದ್ಯಾರ್ಥಿಗಳೂ ಭಾಗಿಯಾಗಲಿದ್ದಾರೆ. ಇಂಡಿಯನ್‌ ಟೆಕ್ನಾಲಜಿಕಲ್‌ ಕಾಂಗ್ರೆಸ್‌ ಅಸೋಸಿಯೇಷನ್‌ ಮತ್ತು ಇಸ್ರೋದ ಸಹಕಾರ ಇದಕ್ಕೆ ಸಿಗಲಿದೆ ಎಂದು ವಿವರಿಸಿದರು.

ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸರ್ಕಾರಿ ಶಾಲೆ-ಕಾಲೇಜುಗಳು ಸ್ಪರ್ಧೆ ನೀಡಬೇಕು. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯು 2221ರಿಂದ 2743 ಕ್ಕೆ ಹೆಚ್ಚಳವಾಗಿದೆ. ಇದಕ್ಕೆ ತಕ್ಕಂತೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು.

50 ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್‌ ವಿತರಿಸಲಾಯಿತು. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ವೂಡೇ ಪಿ.ಕೃಷ್ಣ, ಶಿಕ್ಷಣ ತಜ್ಞ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಶೇ.65ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ನಮ್ಮ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆ ಸತತ ಸಂಪರ್ಕದಲ್ಲಿದ್ದು ನಿಗಧಿತ ಗುರಿ ಸಾಧಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.