ಕೋವಿಡ್ ಹಿನ್ನೆಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿದ್ದು, ಹಲವಾರು ವಿದ್ಯಾರ್ಥಿಗಳು ಇನ್ನೂ ಕೂಡಾ ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದಾಖಲಾತಿ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಬೆಂಗಳೂರು, (ಫೆ.06): ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳ ದಾಖಲಾತಿ ಕೊನೆಯ ದಿನಾಂಕವನ್ನು ಫೆಬ್ರವರಿ 20ರವರೆಗೆ ವಿಸ್ತರಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ ಎಂದರು.

ವಿಜಯನಗರ ಸಾಮ್ರಾಜ್ಯ ಸ್ಥಾಪಕರು ಯಾರು? ವಿದ್ಯಾರ್ಥಿಯ ಫನ್ನಿ ಉತ್ತರ ವೈರಲ್

ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ. 20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಎಲ್ಲ ತರಗತಿಗಳ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು ಪ್ರಸ್ತುತ ವರ್ಷದ ಶಾಲಾಕಾಲೇಜುಗಳ ದಾಖಲಾತಿ ಪ್ರವೇಶ ಅವಧಿಯನ್ನು ವಿಸ್ತರಿಸಬೇಕೆಂದು ಸುರೇಶ್ ಕುಮಾರ್ ಸೂಚನೆ ನೀಡಿದರು.