ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಗೆಲುವಿನ ಸಮೀಪದಲ್ಲಿದ್ದು, ಬಿಜೆಪಿ ಬೆಂಬಲಿಸುತ್ತಾರಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.

ಮಂಡ್ಯ : ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದು, ಈ ಬಗ್ಗೆ ಬಿಜೆಪಿ ನಾಯಕ ಬಿಎಸ್ ವೈ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಬಿಜೆಪಿ ಅಭ್ಯರ್ಥಿಗಳು 24 ಕ್ಷೇತ್ರದಲ್ಲಿ ಗೆಲುವು ಪಡೆದಿರುವುದಕ್ಕಿಂತ ಹೆಚ್ಚಿನ ಸಂತೋಷವಾಗಿದೆ. ಕೋಟಿ ಕೋಟಿ ಹಣ ಖರ್ಚು ಮಾಡಿ ಗೆಲುವು ಪಡೆಯಬಹುದು ಎಂದುಕೊಂಡವರಿಗೆ ಮಂಡ್ಯದ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದರು. 

ನಾನು ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಸುಮಲತಾ ಗೆಲುವಿಗೆ ಕಾರಣರಾದ ಮತದಾರರೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

ರಾಜ್ಯದಲ್ಲಿ ಸರ್ಕಾರ ಬದಲಾವಣೆ ವಿಚಾರವಾಗಿ ಸದ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಸದ್ಯ ಕಿತ್ತಾಟ ಆಗುತ್ತಿದ್ದು, ಏನಾಗಲಿದೆಯೋ ಎನ್ನುವುದನ್ನು ಕಾದು ನೋಡೋಣ. ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಜ್ಜಾಗಿದ್ದು, ಪಕ್ಷಕ್ಕೆ ಬಂದರೆ ಸ್ವಾಗತ ಎಂದರು. 

ರಾಜ್ಯ ರಾಜಕೀಯದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೇಂದ್ರದ ನಾಯಕರು ಏನು ಹೇಳುತ್ತಾರೋ ಹಾಗೆ ನಡೆದುಕೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.