ದೇವೇಗೌಡ್ರ ಮನೆಯಲ್ಲಿ ಕಾಂಗ್ರೆಸ್ ನಾಯಕ, JDSನಿಂದಲೇ ಸ್ಪರ್ಧಿಸುವ ಬಗ್ಗೆ ಚರ್ಚೆ
ಜೆಡಿಎಸ್ ಪ್ರಭಾವ ಇಲ್ಲದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಈ ಕ್ಷೇತ್ರದಿಂದ ಜೆಡಿಎಸ್, ಕಾಂಗ್ರೆಸ್ ಮುಖಂಡನನ್ನು ಕಣಕ್ಕಳಿಸಲು ನಿರ್ಧರಿಸಿದೆ. ಇದಕ್ಕೆ ಪುಷ್ಠಿ ನೀಡುವಂತೆ ಆ ಕಾಂಗ್ರೆಸ್ ನಾಯಕ ಇಂದು ದೊಡ್ಡಗೌಡ್ರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು, [ಮಾ.20]: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಗೆ ಪಾಲಿಗೆ ಸಿಕ್ಕಿದೆ. ಆದ್ರೆ ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲ. ಇದ್ರಿಂದ ಜೆಡಿಎಸ್, ಕಾಂಗ್ರೆಸ್ ನಾಯಕನನ್ನು ತನ್ನ ಚಿಹ್ನೆಯಡಿಯಲ್ಲಿ ಅಖಾಡಕ್ಕಿಳಿಸಲು ಮುಂದಾಗಿದೆ.
ಕಾಂಗ್ರೆಸ್ನ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧೆ
ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಜೆಡಿಎಸ್ ಚಿಹ್ನೆ ಅಡಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅಖಾಡಕ್ಕಿಳಿಸುವ ಸಾಧ್ಯತೆಗಳಿವೆ.
ಇದಕ್ಕೆ ಪೂರಕವೆಂಬಂತೆ ಇಂದು [ಬುಧವಾರ] ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿರುವುದು ಮತ್ತಷ್ಟು ಪುಷ್ಠಿ ನೀಡಿದೆ.
ಪ್ರಮೋದ್ ಮಧ್ವರಾಜ್ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಕುರಿತು ದೇವೇಗೌಡರ ಜೊತೆ ಚರ್ಚೆ ನಡೆಸಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಮೋದ್ ಮಧ್ವರಾಜ್, ಸಹಜವಾಗಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಬಯಸಿದ್ದೆ. ಆದ್ರೆ ಈ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಬಂದಿದೆ.
ಇದು ಮತ್ತೆ ಕೈ ಪಾಲಿಗೆ ಬರಬೇಕಿದ್ದರೆ ಹೈ ಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಒಂದು ವೇಳೆ ಸಾಧ್ಯ ಆಗದೆ ಇದ್ದರೆ, ಉಭಯ ಪಕ್ಷಗಳು ಒಪ್ಪಿದರೆ ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧೆಗೆ ಸಿದ್ದ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.