ಕಾಂಗ್ರೆಸ್ನ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧೆ
ಕಾಂಗ್ರೆಸ್ನ ಮಧ್ವರಾಜ್ ಜೆಡಿಎಸ್ನಿಂದ ಸ್ಪರ್ಧೆ| ಉತ್ತರ ಕನ್ನಡದಿಂದ ಆನಂದ್ ಅಸ್ನೋಟಿಕರ್: ಮೂಲಗಳು| ಸುಮಲತಾ ಬೆನ್ನಿಗೆ ಚಿತ್ರರಂಗ: ಸಿಎಂಗೆ ಹೊಸ ತಲೆನೋವು
ಬೆಂಗಳೂರು[ಮಾ.19]: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಲಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಕುರಿತು ವಿಸ್ತೃತವಾಗಿ ಸಮಾಲೋಚನೆ ನಡೆಸಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಕಾಂಗ್ರೆಸ್ನಲ್ಲಿರುವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಿಂದ ಆನಂದ್ ಅಸ್ನೋಟಿಕರ್ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಂಡ್ಯ ಕ್ಷೇತ್ರಕ್ಕೆ ತಮ್ಮ ಪುತ್ರ ನಿಖಿಲ್ ಕುಮಾರ್ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಜತೆ ಗಂಭೀರವಾಗಿ ಚರ್ಚಿಸಿದರು. ನಟಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾದ ಬಳಿಕ ಸಭೆ ನಡೆಸಿ ರಣತಂತ್ರ ರೂಪಿಸುವಲ್ಲಿ ತೊಡಗಿದರು. ಸುಮಲತಾ ಬೆಂಬಲಕ್ಕೆ ಕನ್ನಡ ಚಿತ್ರೋದ್ಯಮ ಬೆಂಬಲಕ್ಕೆ ನಿಂತಿರುವುದು ಕುಮಾರಸ್ವಾಮಿಗೆ ಇನ್ನಿಲ್ಲದ ತಲೆನೋವಾಗಿ ಪರಿಣಮಿಸಿದೆ. ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ನ ಏಳು ಶಾಸಕರು ಇರುವ ಕಾರಣ ಅವರ ಹೆಗಲಿಗೆ ನಿಖಿಲ್ ಕುಮಾರಸ್ವಾಮಿ ಗೆಲುವಿನ ಜವಾಬ್ದಾರಿ ಹೊರಿಸಲಾಗಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅತ್ಯಂತ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಒಂದು ಕಾಲದಲ್ಲಿ ಆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಇದ್ದರು. ಆದರೆ, ಕಳೆದ 15 ವರ್ಷಗಳಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಕೆಲವೊಂದು ನ್ಯೂನತೆಗಳಿಂದ ಪೆಟ್ಟು ತಿಂದಿದ್ದು, ಮುಂದಿನ ದಿನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಭದ್ರ ಬುನಾದಿ ಹಾಕಲಿದ್ದೇವೆ ಎಂದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...