ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ಹೊಸ ಬಾಂಬ್ ಸಿಡಿಸಿದ್ದಾರೆ. 

ಯಾದಗಿರಿ : ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಮಾಜಿ‌ ಸಚಿವ ಹಾಗೂ ಯಾದಗಿರಿಯ ಕಾಂಗ್ರೆಸ್ ಹಿರಿಯ ಮುಖಂಡ ಡಾ.ಎ.ಬಿ.ಮಾಲಕ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರಗಿಯಲ್ಲಿ ಮಾಲಕರೆಡ್ಡಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ನಾನು ರಾಹುಲ್ ಗಾಂಧಿಯ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಅಲ್ಲದೇ ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಸೂಕ್ತ ವ್ಯಕ್ತಿಯಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧತೆ ಮಾಡಿಕೊಂಡಿಲ್ಲ. ದೇಶದ ರಕ್ಷಣಾ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ ಎಂದು ಹೇಳಿದ್ದಾರೆ. ಮೋದಿಗೆ ಇರುವ ಪ್ರಧಾನಿ ಹುದ್ದೆಯ ಮೇಲಿನ‌ ಹಿಡಿತ ರಾಹುಲ್ ಗಾಂಧಿಗೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಬೆಂಬಲಿಸುವಂತೆ ಮಾತನಾಡಿದ್ದು, ನಾನು ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ನನಗೆ ಯಾವುದೇ ಅಸಮಾಧಾನ ಇಲ್ಲ. ನನಗೆ ಆರೋಗ್ಯ ಸಮಸ್ಯೆ ಇದ್ದು, ಆದ್ದರಿಂದ ಚುನಾವಣೆ ಕಾರ್ಯಗಳಲ್ಲಿ ಭಾಗವಹಿಸಲಾಗುತ್ತಿಲ್ಲ ಎಂದೂ ಹೇಳಿದರು. 

ನಾನು ಖರ್ಗೆ ಪರ ಪ್ರಚಾರ ಮಾಡುವುದಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ‌ಬಿಟ್ಟು‌ ಹೋಗುತ್ತಿದ್ದಾರೆ. ಅಲ್ಲದೇ ನಾನು ಖರ್ಗೆಯ ನಾಯಕತ್ವವನ್ನೂ ಸಹ ಒಪ್ಪುವುದಿಲ್ಲ ಎಂದರು. ಖರ್ಗೆಯವರನ್ನು ನನ್ನ ಲೀಡರ್ ಎಂದು ಒಪ್ಪಿಲ್ಲ ಎಂದರು. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ.