ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೂ ಫೈನಲ್ ಆಗುತ್ತಿದ್ದು ಚಾಮರಾಜನಗರದಿಂದ ಬಿಜೆಪಿ ಅಭ್ಯರ್ಥಿ ಬಹುತೇಕ ಖಚಿತವಾದಂತಾಗಿದೆ. 

ಬೆಂಗಳೂರು: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಮ್ಮತಿಸಿದರು. 

Add Asianetnews Kannada as a Preferred SourcegooglePreferred

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಿಗರು, ಹಿತೈಷಿಗಳು ಹಾಗೂ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಚುನಾವಣೆ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ ಎಂದು ಪ್ರಕಟಿಸಿದರು. ನಾನು ಸಕ್ರಿಯ ರಾಜಕಾರಣ ದಿಂದ ದೂರ ಉಳಿದಿದ್ದೆ. ಈ ಕಾರಣಕ್ಕಾಗಿಯೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 

ಆದರೆ, ಇದೀಗ ಬೆಂಬಲಿಗರು, ಹಿತೈಷಿಗಳು ಮತ್ತು ಪಕ್ಷದ ನಾಯಕರು ನಾನು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಆಗ್ರಹಕ್ಕೆ ಮಣಿದಿದ್ದೇನೆ. ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನೂರಕ್ಕೆ ನೂರರಷ್ಟು ಜಯ ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.