ಜೆಡಿಎಸ್ ಮುಖಂಡ ದೇವೇಗೌಡರಿಗೆ ಜಮೀರ್ ಆಹ್ವಾನ
ಲೋಕಸಭಾ ಚುನಾವಣೆ ಸಮೀಪಿಸಿದ್ದು ಇದೇ ವೇಳೆ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಜಮೀರ್ ಅಹಮದ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೇಳಿದ್ದಾರೆ.
ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಕೋರಿದ್ದು, ಅವರು ಸ್ಪರ್ಧಿಸಿದರೆ ಗೆಲ್ಲಿಸಿಕೊಂಡು ಬರುವುದಾಗಿಯೂ ಹೇಳಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬುಧವಾರ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಹಾಗೂ ತುಮಕೂರಿನಿಂದ ಸ್ಪರ್ಧಿಸುವಂತೆಯೂ ಅಲ್ಲಿನ ಕಾರ್ಯಕರ್ತರು ಹಾಗೂ ಮುಖಂಡರು ದೇವೇಗೌಡರಿಗೆ ಆಹ್ವಾನಿಸುತ್ತಿದ್ದಾರೆ. ನಾನು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಕೋರಿದ್ದೇನೆ. ಸ್ಪರ್ಧಿಸಿದರೆ ಗೆಲ್ಲಿಸಿಕೊಂಡು ಬರುವುದಾಗಿ ತಿಳಿಸಿದ್ದೇನೆ. ನೋಡೋಣ ಏನಾಗುತ್ತದೆ ಎಂದರು.
ಮಂಡ್ಯದಲ್ಲಿ ನಟಿ ಸುಮಲತಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನ ಯಾವ ಮುಖಂಡರೂ ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ. ನಟ ಅಂಬರೀಷ್ ಅವರ ಮೇಲಿನ ಅಭಿಮಾನದಿಂದ ಕೆಲವು ಕಾರ್ಯಕರ್ತರು ಸುಮಲತಾ ಅವರ ನಾಮಪತ್ರ ಸಲ್ಲಿಕೆ ವೇಳೆ ಗುರುತಿಸಿಕೊಂಡಿದ್ದಾರೆ ಅಷ್ಟೆಎಂದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...