ದೇವೇಗೌಡರ ವಿರುದ್ಧ ಕೆಲಸ: ಇಬ್ಬರು ಕೈ ಮುಖಂಡರು ವಜಾ!
ರಾಜಣ್ಣ ಬೆಂಬಲಿಗ ಇಬ್ಬರು ಕಾಂಗ್ರೆಸ್ ಮುಖಂಡರ ವಜಾ| ದೇವೇಗೌಡರ ವಿರುದ್ಧ ಕೆಲಸ
ಬೆಂಗಳೂರು[ಏ.20]: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ. ದೇವೇಗೌಡರ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಧುಗಿರಿ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಕಾರ್ಯನಿರ್ವಹಿಸಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಮಧುಗಿರಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್. ರಾಜಗೋಪಾಲ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್. ಮಲ್ಲಿಕಾರ್ಜುನಯ್ಯ ಅವರನ್ನು ಉಚ್ಚಾಟಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಚುನಾವಣೆಯ ವೀಕ್ಷಕರ ಸೂಚನೆಗಳನ್ನು ಪಾಲಿಸದೆ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಇಬ್ಬರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.