ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ 2026ರ ಮೈಸೂರು ದಸರಾ ಪೂರ್ವಸಿದ್ಧತಾ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು, ಏರ್ ಶೋ ಆಯೋಜಿಸಲು ಹಾಗೂ ಡ್ರೋನ್ ಶೋ, ವಿಂಟೇಜ್ ಕಾರ್ ರ್ಯಾಲಿಯಂತಹ ವಿನೂತನ ಕಾರ್ಯಕ್ರಮಗಳನ್ನು ಸೇರಿಸಲು ನಿರ್ಧರಿಸಲಾಗಿದೆ.
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ 2026ನೇ ಸಾಲಿನ ನಾಡಹಬ್ಬ ಮೈಸೂರು ದಸರಾ ಪೂರ್ವಸಿದ್ದತೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ, ಯುವ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ. ಬಿ. ಕಾವೇರಿ, ಪ್ರವಾಸೋದ್ಯಮ ಇಲಾಖೆ ಆಯುಕ್ತ ರಾಮ್ ಪ್ರಸಾತ್ ಮನೋಹರ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿ ಇ ಓ ಉಕೇಶ್ ಕುಮಾರ್, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಇನ್ನಿತರರು ಭಾಗಿಯಾಗಿದ್ದರು.
ದಸರಾ 2026: ಆಗಸದಲ್ಲಿ ವಿಸ್ಮಯ, ದಕ್ಷಿಣ ಭಾರತಕ್ಕೆ ಆಹ್ವಾನ!
ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ, ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ ಮಾಡಲಾಗಿದೆ. ಜೊತೆಗೆ ರಾಜ್ಯಗಳ ಕಲಾತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧಾರ ಮಾಡಲಾಗಿದೆ.
ಇದರೊಂದಿಗೆ ಕೇಂದ್ರ ರಕ್ಷಣಾ ಸಚಿವರ ಜೊತೆ ಏರ್ ಶೋ ನಡೆಸುವ ಬಗ್ಗೆಯೂ ಸಿಎಂ ಚರ್ಚೆ ನಡೆಸಲಿದ್ದಾರೆ. ಏರ್ ಷೋ ನಡೆಸುವ ಬಗ್ಗೆ ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಮನವಿ ಮಾಡಲಾಗಿದೆ. ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆಗೆ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ.
ಇನ್ನು, ವಿವಿಧ ದೇಶಗಳ ರಾಯಭಾರಿಗಳು, ಅಧಿಕಾರಿಗಳನ್ನು ಆಹ್ವಾನಿಸಲು ಸೂಚನೆ ನೀಡಲಾಗಿದ್ದು, ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ್ಯಾಲಿ, ರಂಗೋಲಿ ಸ್ಪರ್ಧೆ ಮತ್ತಿತರ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ, ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ಪ್ರತಿ ದಿನ ಒಬ್ಬ ಸಚಿವರನ್ನು ನಿಯೋಜಿಸಲು ನಿರ್ದೇಶನ ನೀಡಲಾಗಿದ್ದು, ಕಳೆದ ವರ್ಷದಿಂದೇ ಈ ವರ್ಷವೂ ಡ್ರೋನ್ ಶೋ ಆಯೋಜಿಸಲು ಉದ್ದೇಶಿಸಿದೆ. ಭಾರತೀಯ ಸೇನಾಪಡೆಗಳು, ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇಸ್ರೋ, ಡಿ.ಆರ್. ಡಿ. ಓ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳಿಗೆ ಆಹ್ವಾನ ನೀಡಲು ನಿರ್ಧಾರಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ಕಲಾ ತಂಡಗಳಿಗೆ ಅವಕಾಶ ನೀಡಲು ಸೂಚನೆ ನೀಡಲಾಗಿದ್ದು, ಮೈಸೂರಿನ ಅರಮನೆ ಮತ್ತಿತರ ಪ್ರಮುಖ ತಾಣಗಳ ಕುರಿತು ಕಿರುಚಿತ್ರ ನಿರ್ಮಿಸಿ, ವ್ಯಾಪಕ ಪ್ರಚಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ.


