ಮನುಷ್ಯನ ಬುದ್ಧಿ ವಿಕಾಸಗೊಂಡಷ್ಟುಭಾವನೆಗಳು ಬೆಳೆಯುತ್ತಿಲ್ಲ. ಸ್ವಾರ್ಥ ಮತ್ತು ಸಂಕುಚಿತ ಮನೋಭಾವನೆ ಹೆಚ್ಚು ಬೆಳೆಯುತ್ತಿರುವ ಕಾರಣ ಜೀವನದಲ್ಲಿ ನೆಮ್ಮದಿ ಕಾಣುತ್ತಿಲ್ಲ. ಸ್ವಾರ್ಥವಿಲ್ಲದ ಬದುಕು ಸರ್ವ ಕಾಲಕ್ಕೂ ಶ್ರೇಷ್ಠವಾದುದೆಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಬೀದರ್‌ (ಜು.27) :  ಮನುಷ್ಯನ ಬುದ್ಧಿ ವಿಕಾಸಗೊಂಡಷ್ಟುಭಾವನೆಗಳು ಬೆಳೆಯುತ್ತಿಲ್ಲ. ಸ್ವಾರ್ಥ ಮತ್ತು ಸಂಕುಚಿತ ಮನೋಭಾವನೆ ಹೆಚ್ಚು ಬೆಳೆಯುತ್ತಿರುವ ಕಾರಣ ಜೀವನದಲ್ಲಿ ನೆಮ್ಮದಿ ಕಾಣುತ್ತಿಲ್ಲ. ಸ್ವಾರ್ಥವಿಲ್ಲದ ಬದುಕು ಸರ್ವ ಕಾಲಕ್ಕೂ ಶ್ರೇಷ್ಠವಾದುದೆಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Add Asianetnews Kannada as a Preferred SourcegooglePreferred

ಅವರು ಬುಧವಾರ ತಾಲೂಕಿನ ಕೊಳಾರ್‌ (ಕೆ) ವ್ಯಾಪ್ತಿಯಲ್ಲಿ ಬರುವ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಅಶೀರ್ವಚನ ನೀಡಿ, ಮನುಷ್ಯ ನೀರು ಶುದ್ಧಿ ಮಾಡುವುದನ್ನು ಮತ್ತು ಗಾಳಿ ಶುದ್ಧಿ ಮಾಡುವುದನ್ನು ಕಲಿತ. ಆದರೆ ತನ್ನಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದನ್ನು ಮರೆತ. ಬಹಿರಂಗ ಅಷ್ಟೇ ಶುದ್ಧಿಯಾದರೆ ಸಾಲದು. ಅಂತರಂಗವೂ ಶುದ್ಧಿಯಾಗಿರಬೇಕು. ಜೀವನದ ಶ್ರೇಯಸ್ಸಿಗೆ ಬಹಿರಂಗ ಮತ್ತು ಅಂತರಂಗ ಎರಡೂ ಶುದ್ಧವಾಗಿರಬೇಕು ಎಂದು ರೇಣುಕ ಗೀತೆಯಲ್ಲಿ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ್ದಾರೆ.

ಗುರಿ, ಗುರು ಇಲ್ಲದ ಜೀವನ ವ್ಯರ್ಥ: ರಂಭಾಪುರಿ ಶ್ರೀಗಳು

ತಮಲೂರು ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕೊಟ್ಟಮಾತು ಇಟ್ಟನಂಬಿಕೆ ಸುಳ್ಳಾದರೆ ಆತನ ಬೆಲೆ ಶೂನ್ಯವಾಗುತ್ತದೆ. ವೀರಶೈವ ಧರ್ಮದಲ್ಲಿರುವ ಆದರ್ಶ ಮೌಲ್ಯಗಳನ್ನು ಅರಿಯುವ ಆಚರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಜೆಪಿ ಮುಖಂಡ ಈಶ್ವರಸಿಂಗ ಠಾಕೂರ ಮಾತನಾಡಿ, ಹಿಂದೂ ಸಂಸ್ಕೃತಿಯ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಹಿಂದೂ ಸಮಾಜ ಒಗ್ಗಟ್ಟಿನಿಂದ ದೇಶದ ಭದ್ರತೆ ಮತ್ತು ಸಾಮರಸ್ಯ ಸೌಹಾರ್ದತೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.

ಹುಡುಗಿ ಹಿರೇಮಠದ ವಿರೂಪಾಕ್ಷ ಲಿಂಗ ಶಿವಾಚಾರ್ಯರು, ತಮಲೂರಿನ ಶಿವಾನಂದ ಶಿವಾಚಾರ್ಯರು, ಮೇಹಕರ, ತಡೋಳಾ ಹಾಗೂ ಡೋಣಗಾಪುರ ಮಠಗಳ ರಾಜೇಶ್ವರ ಶಿವಾಚಾರ್ಯರು ಧರ್ಮ ಸಮಾರಂಭದಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಸವರಾಜ ದೇಶಮುಖ, ಮಾರುತಿ ಪಂಚಬಾಯಿ, ಶಿವಶರಣಪ್ಪ ಸೀರಿ, ಗುರುರಾಜ ಮೋಳಕೇರಿ ಹಾಗೂ ಇತರರು ಉಪಸ್ಥಿತರಿದ್ದರು.

ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದ ಸಂಚಾಲಕರಾದ ವೇ.ಷÜಣ್ಮುಖಯ್ಯ-ತೇಜಮ್ಮ ದಂಪತಿಗಳಿಗೆ ಸಹಸ್ರ ಚಂದ್ರದರ್ಶನ ನಿಮಿತ್ಯ ರಂಭಾಪುರಿ ಜಗದ್ಗುರುಗಳು ಶಾಲು ಹೊದಿಸಿ ಶುಭ ಹಾರೈಸಿದರು.

ಲೋಕ ಕಲ್ಯಾಣಾರ್ಥವಾಗಿ ರಂಭಾಪುರಿ ಜಗದ್ಗುರುಗಳು ರೇಣುಕಾಚಾರ್ಯ ಮಂದಿರದಲ್ಲಿ ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಭಕ್ತ ಸಮುದಾಯಕ್ಕೆ ಶುಭ ಹಾರೈಸಿದರು.

ಗೋ ಹತ್ಯೆ, ಮತಾಂತರ ನಿಷೇಧ ಕಾನೂನು ರದ್ದು ಬೇಡ: ರಂಭಾಪುರಿ ಶ್ರೀ

ಆರಂಭದಲ್ಲಿ ರೇಣುಕಾಚಾರ್ಯ ಮಂದಿರ ಹಾಗೂ ಜಗದ್ಗುರು ಪಂಚಾಚಾರ್ಯ ಎಜುಕೇಶನ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸ್ವಾಗತಿಸಿದರೆ, ಖಜಾಂಚಿ ಶ್ರೀಕಾಂತ ಸ್ವಾಮಿ ಸೋಲಪೂರ ನಿರೂಪಿಸಿದರೆ, ಕಾರ್ತಿಕ ಮಠಪತಿ ವಂದಿಸಿದರು. ಸಮಾರಂಭದ ನಂತರ ಅನ್ನ ದಾಸೋಹ ನೆರವೇರಿತು.