ಭೀಕರ ಅಪಘಾತದಲ್ಲಿ ಕರ್ನಾಟಕ ಬಿಜೆಪಿ ನಾಯಕನ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅವಳಿ ಜವಳಿ ಮಗುವಿನಲ್ಲಿ ಗಂಡು ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಬದುಕಿದಿದೆ.  ಬಿಜೆಪಿ ನಾಯಕ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಕೊಪ್ಪಳ(ಮಾ.09): ಕಾರು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿರೋ ಬೂದಿ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ. ಬಿಜೆಪಿಯ ಕೊಪ್ಪಳ ನಗರ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಶ್ವ ಹಿಂದು ಪರಿಷತ್‌ನ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶಿವಕುಮಾರ ಹಕ್ಕಾಪಕ್ಕಿ ಅವರ ಅತ್ತೆ, ಹೆಂಡತಿ ಹಾಗೂ ಮಗು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಂಗಾವತಿಯ ಪ್ರಮೀಳಾ ಮಸ್ಕಿ (70), ಪೂರ್ಣಿಮಾ ಹಕ್ಕಾಪಕ್ಕಿ (45) ಮತ್ತು 17 ತಿಂಗಳ ಗಂಡು ಮಗು ಆರ್ಯ ಮೃತರು. ಅವಳಿ ಜವಳಿ ಮಕ್ಕಳಲ್ಲಿ ಗಂಡು ಮಗು ಆರ್ಯ ಸಾವನಪ್ಪಿದ್ದು ಹೆಣ್ಣು ಮಗು ಬದುಕುಳಿದೆ. ಮದುವೆಯಾಗಿ ಬಹಳ ವರ್ಷಗಳಾದರೂ ಹಕ್ಕಾಪಕ್ಕಿ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನವಲಗುಂದದ ರಾಮಲಿಂಗ ಹೋಳಿ ಕಾಮಣ್ಣನಿಗೆ ಹರಕೆ ಕಟ್ಟಿಕೊಂಡಿದ್ದರು. ಒಂದೂವರೆ ವರ್ಷದ ನಂತರ ಮಕ್ಕಳಾದ ಸಂತಸದಲ್ಲಿ, ಹೋಳಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಇಂದು ಹರಕೆ ತೀರಿಸಿ ಕೊಪ್ಪಳಕ್ಕೆ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ಜರುಗಿದೆ. 

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ ಹಕ್ಕಾಪಕ್ಕಿ ಮತ್ತು ಇನ್ನೊಂದು ಅವಳಿ ಮಗು ಅಪಾಯದಿಂದ ಪಾರಾಗಿದ್ದರೆ, ಅವರ ಮಾವನವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.