ಇಂಗ್ಲೆಂಡ್ಗೆ ಬಂದಿಳಿದ ಟೀಂ ಇಂಡಿಯಾ ದಿಗ್ಗಜ; ಗಂಭೀರ್ ಸ್ಥಾನಕ್ಕೆ ನೇಮಕ?
ಲಂಡನ್: ಬಹುನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾ ಪಾಳಯದಲ್ಲಿ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಜೂನ್ 20ರಿಂದ ಆರಂಭವಾಗಲಿದೆ. ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಮಹತ್ವದ ಟೆಸ್ಟ್ ಸರಣಿಗೆ ಸಜ್ಜಾಗಿದೆ.
ಈ ಟೆಸ್ಟ್ ಸರಣಿಯು ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಟೂರ್ನಿ ನಿಟ್ಟಿನಲ್ಲಿ ಸಾಕಷ್ಟು ಮಹತ್ವದ್ದೆನಿಸಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ.
ಹೌದು, ಟೀಂ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ದಿಢೀರ್ ಎನ್ನುವಂತೆ ತವರಿಗೆ ವಾಪಾಸ್ಸಾಗಿದ್ದರು. ಗಂಭೀರ್ ತಾಯಿಗೆ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಯ ಐಸಿಯು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟೆಸ್ಟ್ ಸರಣಿಗೂ ಮುನ್ನ ಗಂಭೀರ್ ಇಂಗ್ಲೆಂಡ್ನಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು. ಇದೆಲ್ಲದರ ನಡುವೆ ಹೊಸ ಬೆಳವಣಿಗೆಯೊಂದು ನಡೆದಿದೆ.
ಸದ್ಯ ಭಾರತ ತಂಡವು ಇಂಗ್ಲೆಂಡ್ನಲ್ಲಿ ಇಂಟ್ರಾಸ್ಕ್ವಾಡ್ ಪ್ರಾಕ್ಟೀಸ್ ಮ್ಯಾಚ್ ಅಡುತ್ತಿದೆ. ಇದೀಗ ಗಂಭೀರ್ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಎನ್ಸಿಎ ಮುಖ್ಯಸ್ಥ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಬಿಸಿಸಿಐ ಇಂಗ್ಲೆಂಡ್ಗೆ ಕಳಿಸಿಕೊಟ್ಟಿದೆ.
ಈ ಮೊದಲು ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಹಂಗಾಮಿ ಹೆಡ್ಕೋಚ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಟೀಂ ಇಂಡಿಯಾ ಹೆಡ್ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಭಾರತ ತಂಡದ ಕೋಚ್ ಆಗಿ ಮಾರ್ಗದರ್ಶನ ನೀಡಿದ್ದಾರೆ.
ಒಂದು ವೇಳೆ ಗೌತಮ್ ಗಂಭೀರ್, ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡ ಕೂಡಿಕೊಳ್ಳಲು ತಡವಾದರೇ, ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ, ಹಂಗಾಮಿ ಹೆಡ್ಕೋಚ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.