Ind vs Aus: ಆಸೀಸ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ..?
ನಾಗ್ಪುರ(ಸೆ.23): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಗ್ಪುರದಲ್ಲಿ ಹೈವೋಲ್ಟೇಜ್ ಪಂದ್ಯ ಜರುಗಲಿದೆ. 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿರುವ ಭಾರತ ತಂಡವು, ಸರಣಿ ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಎರಡನೇ ಪಂದ್ಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ಆಸ್ಟ್ರೇಲಿಯಾ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 3 ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

1. ಕೆ ಎಲ್ ರಾಹುಲ್:
ಬಲಗೈ ಆರಂಭಿಕ ಬ್ಯಾಟರ್ ರಾಹುಲ್, ಆಸೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಆಕರ್ಷಕ 55 ರನ್ ಬಾರಿಸುವ ಮೂಲಕ ತಮ್ಮ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಫಾರ್ಮ್ ಮುಂದುವರೆಸಿಕೊಂಡು ಹೋಗಲು ರೆಡಿಯಾಗಿದ್ದಾರೆ.
2. ರೋಹಿತ್ ಶರ್ಮಾ:
ನಾಯಕ ರೋಹಿತ್ ಶರ್ಮಾ ಕೂಡಾ ಉತ್ತಮ ಫಾರ್ಮ್ನಲ್ಲಿದ್ದು, ತಮಗೆ ಸಿಕ್ಕ ಉತ್ತಮ ಆರಂಭವನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗುತ್ತಿದ್ದಾರೆ. ಹಿಟ್ಮ್ಯಾನ್ ಅವರಿಂದ ಅಭಿಮಾನಿಗಳು ದೊಡ್ಡ ಇನಿಂಗ್ಸ್ ನಿರೀಕ್ಷಿಸುತ್ತಿದ್ದಾರೆ.
3. ವಿರಾಟ್ ಕೊಹ್ಲಿ:
ಏಷ್ಯಾಕಪ್ ಟೂರ್ನಿಯಲ್ಲಿ ಮಿಂಚಿದ್ದ ವಿರಾಟ್ ಕೊಹ್ಲಿ, ಆಸೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ವಿರಾಟ್ ಮತ್ತೆ ಫಾರ್ಮ್ಗೆ ಮರಳಲು ಹಾತೊರೆಯುತ್ತಿದ್ದಾರೆ.
4. ಸೂರ್ಯಕುಮಾರ್ ಯಾದವ್:
ಭಾರತ ಟಿ20 ತಂಡದ ಮಧ್ಯಮ ಕ್ರಮಾಂಕದ ಆಧಾರಸ್ತಂಭ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಕಳೆದ ಪಂದ್ಯದಲ್ಲಿ ಚುರುಕಿನ 45 ರನ್ ಸಿಡಿಸಿದ್ದರು. ಸೂರ್ಯನ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯಿಟ್ಟಿದ್ದಾರೆ.
5. ರಿಷಭ್ ಪಂತ್:
ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್, ಆಸ್ಟ್ರೇಲಿಯಾ ಎದುರಿನ ಮೊದಲ ಪಂದ್ಯದಲ್ಲಿ ವಿಫಲರಾಗಿದ್ದರು. ಹೀಗಾಗಿ ಕಾರ್ತಿಕ್ ಬದಲಿಗೆ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ಇಂದು ರಿಷಭ್ ಪಂತ್ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.
6. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಮೊದಲ ಟಿ20 ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಸಿಡಿಸಿ ಮಿಂಚಿದ್ದರು. ಬ್ಯಾಟಿಂಗ್ನಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಪಾಂಡ್ಯ, ಬೌಲಿಂಗ್ನಲ್ಲಿ ಲಯಕ್ಕೆ ಮರಳಬೇಕಿದೆ.
7. ಅಕ್ಷರ್ ಪಟೇಲ್:
ಮೊದಲ ಪಂದ್ಯದಲ್ಲಿ ಅಶ್ವಿನ್ ಅವರನ್ನು ಹಿಂದಿಕ್ಕಿ ಆಲ್ರೌಂಡರ್ ರೂಪದಲ್ಲಿ ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಅಕ್ಷರ್ 4 ಓವರ್ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು.
8. ರವಿಚಂದ್ರನ್ ಅಶ್ವಿನ್:
ಮೊದಲ ಟಿ20 ಪಂದ್ಯದಲ್ಲಿ ಅನುಭವಿ ಆಫ್ಸ್ಪಿನ್ನರ್ ಅಶ್ವಿನ್ ಬೆಂಚ್ ಕಾಯಿಸಿದ್ದರು. ಇದೇ ವೇಳೆ ಲೆಗ್ಸ್ಪಿನ್ನರ್ ಚಹಲ್ ದುಬಾರಿಯಾಗಿರುವುದರಿಂದ, ಎರಡನೇ ಪಂದ್ಯದಲ್ಲಿ ಅಶ್ವಿನ್ಗೆ ಮಣೆಹಾಕುವ ಸಾಧ್ಯತೆಯಿದೆ.
9. ಹರ್ಷಲ್ ಪಟೇಲ್:
ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಹರ್ಷಲ್ ಪಟೇಲ್, ಆಸೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ದುಬಾರಿಯಾಗಿದ್ದರು. ಎರಡನೇ ಪಂದ್ಯದಲ್ಲಿ ಲಯ ಕಂಡುಕೊಳ್ಳಲು ಪಟೇಲ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ.
10. ಭುವನೇಶ್ವರ್ ಕುಮಾರ್:
ಟೀಂ ಇಂಡಿಯಾ ಮತ್ತೋರ್ವ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಕೂಡಾ ದುಬಾರಿಯಾಗಿದ್ದರು. ಆದರೆ ಇಂದಿನ ಪಂದ್ಯಕ್ಕೆ ಬುಮ್ರಾ ತಂಡ ಕೂಡಿಕೊಳ್ಳುವುದರಿಂದ ಬುಮ್ರಾ ಜತೆಗೆ ಭುವಿ ಹೊಸ ಚೆಂಡಿನೊಂದಿಗೆ ದಾಳಿ ನಡೆಸುವ ಸಾಧ್ಯತೆಯಿದೆ.
11. ಜಸ್ಪ್ರೀತ್ ಬುಮ್ರಾ:
ಮಾರಕ ವೇಗಿ ಬುಮ್ರಾ, ಫಿಟ್ನೆಸ್ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದರು. ಇದೀಗ ಎರಡನೇ ಟಿ20 ಪಂದ್ಯಕ್ಕೆ ಬುಮ್ರಾ, ತಂಡ ಕೂಡಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಉಮೇಶ್ ಯಾದವ್ ಹೊರಗುಳಿಯಬೇಕಾಗುತ್ತದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.