- Home
- Sports
- Cricket
- ಲಂಕಾ ಎದುರಿನ ಟೆಸ್ಟ್ ಸರಣಿ: ಮೂವರು ಕನ್ನಡಿಗರಿಗೆ ಜಾಕ್ಪಾಟ್, ಈ ಮೂವರಿಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್!
ಲಂಕಾ ಎದುರಿನ ಟೆಸ್ಟ್ ಸರಣಿ: ಮೂವರು ಕನ್ನಡಿಗರಿಗೆ ಜಾಕ್ಪಾಟ್, ಈ ಮೂವರಿಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್!
ಮುಂಬೈ: ಮುಂಬರುವ ಆಗಸ್ಟ್ ತಿಂಗಳಿನಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಈ ಮಹತ್ವದ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಇದರಲ್ಲಿ ಮೂವರು ಕನ್ನಡಿಗರಿಗೆ ಜಾಕ್ಪಾಟ್ ಹೊಡೆದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಟೆಸ್ಟ್ ಕ್ರಿಕೆಟ್ಗೆ ರವೀಂದ್ರ ಜಡೇಜಾ ಕಮ್ಬ್ಯಾಕ್
ಭಾರತ ಕ್ರಿಕೆಟ್ ತಂಡವು ಆಗಸ್ಟ್ 15ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಮಹತ್ವದ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಶುಭ್ಮನ್ ಗಿಲ್ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಸರಣಿಗೆ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ತಂಡ ಕೂಡಿಕೊಂಡಿದ್ದಾರೆ. 19ನೇ ಸೀಸನ್ ಐಪಿಎಲ್ ಟೂರ್ನಿಯ ವೇಳೆಯಲ್ಲಿ ಟೆನಿಸ್ ಎಲ್ಬೊ ಗಾಯಕ್ಕೆ ಒಳಗಾಗಿದ್ದ ಜಡ್ಡು, ಕೊನೆಗೂ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ಟೆಸ್ಟ್ ತಂಡದಲ್ಲಿ ಮೊದಲ ಸಲ ಸ್ಥಾನ ಪಡೆದ ಸಾರಾನ್ಶ್ ಜೈನ್
ಜಡ್ದು ಟೀಂ ಇಂಡಿಯಾ ಸೇರ್ಪಡೆ ತಂಡಕ್ಕೆ ಆನೆ ಬಲ ತಂದುಕೊಟ್ಟಿದೆ. ಇದರ ಜತೆಗೆ ಮಧ್ಯಪ್ರದೇಶ ಮೂಲದ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಸಾರಾನ್ಶ್ ಜೈನ್ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗಷ್ಟೇ ಭಾರತ 'ಎ' ಪರ, ಶ್ರೀಲಂಕಾ 'ಎ' ತಂಡದ ವಿರುದ್ದ ಜೈನ್ ಗಮನಾರ್ಹ ಪ್ರದರ್ಶನ ತೋರಿದ್ದರು. ಹೀಗಾಗಿ ಭಾರತ ತಂಡದಿಂದ ಜೈನ್ಗೆ ಬುಲಾವ್ ಬಂದಿದೆ.
ಲಂಕಾ ಎದುರಿನ ಟೆಸ್ಟ್ ಸರಣಿಗೆ ಮೂವರು ಕನ್ನಡಿಗರಿಗೆ ಚಾನ್ಸ್
ಲಂಕಾ ಎದುರಿನ ಟೆಸ್ಟ್ ಸರಣಿಗೆ ಪ್ರಕಟವಾದ 15 ಆಟಗಾರರ ಭಾರತ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಮೂಲದ ಕೆ ಎಲ್ ರಾಹುಲ್, ಪ್ರಸಿದ್ದ್ ಕೃಷ್ಣ ಹಾಗೂ ದೇವದತ್ ಪಡಿಕ್ಕಲ್ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಇದೀಗ ಈ ಮೂವರೂ ಆಟಗಾರರು ಆಡುವ ಹನ್ನೊಂದರ ಬಳಗದಲ್ಲೂ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ಫಿಟ್ನೆಸ್ ಟೆಸ್ಟ್ ಪಾಸ್ ಮಾಡಬೇಕಿದೆ ಬುಮ್ರಾ, ಸಾಯಿ ಸುದರ್ಶನ್
ಹೌದು, ಕನ್ನಡಿಗ ಕೆ ಎಲ್ ರಾಹುಲ್ ಉಪನಾಯಕರಾಗಿದ್ದು, ಸಹಜವಾಗಿಯೇ ಆರಂಭಿಕನಾಗಿ ಟೀಂ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇನ್ನುಳಿದಂತೆ ಸಾಯಿ ಸುದರ್ಶನ್ ಹಾಗೂ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆಯಾದರೂ, ಅವರು ಇನ್ನೂ ಫಿಟ್ನೆಸ್ ಸಾಬೀತುಪಡಿಸಿಲ್ಲ. ಮುಂಬರುವ ಮಹತ್ವದ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಬುಮ್ರಾ ಹಾಗೂ ಸುದರ್ಶನ್ ಅವರಿಗೆ ಲಂಕಾ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಆತುರ ತೋರಿಸುವ ಸಾಧ್ಯತೆ ಕಡಿಮೆಯಿದೆ.
ಮತ್ತಿಬ್ಬರು ಕನ್ನಡಿಗರಿಗೂ ಚಾನ್ಸ್
ಹೀಗಾದಲ್ಲಿ ಸಾಯಿ ಸುದರ್ಶನ್ ಬದಲಿಗೆ ಈಗಾಗಲೇ ದೇಶಿ ಕ್ರಿಕೆಟ್ನಲ್ಲಿ ಮಿಂಚುತ್ತಾ ಬಂದಿರುವ ದೇವದತ್ ಪಡಿಕ್ಕಲ್ಗೆ ಮೂರನೇ ಕ್ರಮಾಂಕದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಇದರ ಜತೆಗೆ ಬುಮ್ರಾ ಬದಲಿಗೆ ನೀಳಕಾಯದ ವೇಗಿ ಪ್ರಸಿದ್ದ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದೆ.
ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:
ಶುಭ್ಮನ್ ಗಿಲ್(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್(ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ*, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸಾರಾನ್ಶ್ ಜೈನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

