ಪಂಜಾಬ್ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಆರ್ಸಿಬಿ ತಂಡದಲ್ಲಿ 2 ಮೇಜರ್ ಚೇಂಜ್!
ಮುಲ್ಲಾನ್ಪುರ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕ್ವಾಲಿಫೈಯರ್ 1ರಲ್ಲಿ ಚೊಚ್ಚಲ ಟ್ರೋಫಿ ಕನವರಿಕೆಯಲ್ಲಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್ಸಿಬಿ 2 ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

2016ರ ಬಳಿಕ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಲು ಕನಸು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಕ್ವಾಲಿಫೈಯರ್ 1 ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ.
ಕಳೆದ ಪಂದ್ಯದಲ್ಲಿ ಆರ್ಸಿಬಿ ತಂಡವು ಲಖನೌ ಸೂಪರ್ ಜೈಂಟ್ಸ್ ಎದುರು ದಾಖಲೆಯ 228 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.
ಇದೀಗ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಮಹತ್ವದ ಪಂದ್ಯ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡವು ಎರಡು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಅಗ್ರಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಕಳೆದ ಪಂದ್ಯದಂತೆ ಈ ಬಾರಿಯು ಈ ಜೋಡಿ ಉತ್ತಮ ಆರಂಭ ಒದಗಿಸಿಕೊಡಬೇಕಿದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟೀದಾರ್ ಫಾರ್ಮ್ಗೆ ಮರಳಬೇಕಿದೆ. ಕಳೆದೆರಡು ಪಂದ್ಯಗಳಲ್ಲಿ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದಿದ್ದ ಪಾಟೀದಾರ್, ಇಂದು ಪೂರ್ಣ ಪ್ರಮಾಣದ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಮಯಾಂಕ್ ಅಗರ್ವಾಲ್ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಮತ್ತೊಂದು ಉಪಯುಕ್ತ ಇನ್ನಿಂಗ್ಸ್ ಆಡಲು ಸಜ್ಜಾಗಿದ್ದಾರೆ. ಇವರ ಜತೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಸೇರಿಕೊಂಡರೆ ಬೆಂಕಿ-ಬಿರುಗಾಳಿ ಜತೆಯಾದಂತೆ ಆಗಲಿದೆ.
ಕಳೆದ ಪಂದ್ಯದಲ್ಲಿ ಟಿಮ್ ಡೇವಿಡ್ ಬದಲಿಗೆ ಇಂಗ್ಲೆಂಡ್ನ ಲಿಯಾಮ್ ಲಿವಿಂಗ್ಸ್ಟೋನ್ ತಂಡ ಕೂಡಿಕೊಂಡಿದ್ದರು. ಆದರೆ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದರು. ಹೀಗಾಗಿ ಇಂದು ಲಿವಿಂಗ್ಸ್ಟೋನ್ ಬದಲಿಗೆ ಟಿಮ್ ಡೇವಿಡ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
ಇನ್ನುಳಿದಂತೆ ಆಲ್ರೌಂಡರ್ಗಳಾದ ರೊಮ್ಯಾರಿಯೋ ಶೆಫರ್ಡ್ ಹಾಗೂ ಕೃನಾಲ್ ಪಾಂಡ್ಯ ಯಾವುದೇ ಕ್ಷಣದಲ್ಲಿ ಬೇಕಿದ್ದರೂ ತಂಡಕ್ಕೆ ಆಸರೆಯಾಗಬಲ್ಲ ಆಟಗಾರರಾಗಿದ್ದು, ಈ ಇಬ್ಬರೂ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿಕೊಂಡಿದೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಕಳೆದ ಪಂದ್ಯದಲ್ಲಿ ನುವಾನ್ ತುಷಾರ ಮಾರಕ ದಾಳಿ ನಡೆಸಿ ಗಮನ ಸೆಳೆದಿದ್ದರು. ಹೀಗಿದ್ದೂ ಇಂದಿನ ಪಂದ್ಯಕ್ಕೆ ಅಸೀಸ್ ವೇಗಿ ಜೋಶ್ ಹೇಜಲ್ವುಡ್ ಸಂಪೂರ್ಣ ಫಿಟ್ ಅಗಿದ್ದು, ತಂಡ ಕೂಡಿಕೊಳ್ಳಲು ರೆಡಿಯಾಗಿದ್ದಾರೆ. ಹೀಗಾಗಿ ತುಷಾರ ಅನಿವಾರ್ಯವಾಗಿ ಹೊರಗುಳಿಯಬೇಕಾಗಬಹುದು.
ಇನ್ನುಳಿದಂತೆ ಬೌಲಿಂಗ್ ವಿಭಾಗದಲ್ಲಿ ಮತ್ತೆ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಕಡಿಮೆ. ಯಶ್ ದಯಾಳ್, ಭುವನೇಶ್ವರ್ ಕುಮಾರ್ ಹಾಗೂ ಸುಯಾಶ್ ಶರ್ಮಾ ತಮ್ಮ ಬತ್ತಳಿಕೆಯಲ್ಲಿರುವ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ರೆಡಿಯಾಗಿದ್ದಾರೆ.