- Home
- Sports
- Cricket
- ಆರ್ಸಿಬಿ-ಪಂಜಾಬ್ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದ್ರೆ ಮುಂದೇನು? ಯಾರಿಗೆ ಫೈನಲ್ ಟಿಕೆಟ್?
ಆರ್ಸಿಬಿ-ಪಂಜಾಬ್ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದ್ರೆ ಮುಂದೇನು? ಯಾರಿಗೆ ಫೈನಲ್ ಟಿಕೆಟ್?
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇದೀಗ ಕ್ವಾಲಿಫೈಯರ್ 1 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದು ವೇಳೆ ಇಂದಿನ ಪಂದ್ಯ ಮಳೆಯಿಂದ ರದ್ದಾದ್ರೆ ಮುಂದೇನು? ಫೈನಲ್ ಟಿಕೆಟ್ ಯಾರಿಗೆ ಸಿಗುತ್ತೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ.

2025ರ ಐಪಿಎಲ್ ಟೂರ್ನಿಯ ಕ್ವಾಲಿಫೈಯರ್ 1 ಪಂದ್ಯದಲ್ಲಿಂದು ಆತಿಥೇಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಪ್ರಶಸ್ತಿ ಸುತ್ತಿಗೆ ಪ್ರವೇಶಿಸುವ ನಿಟ್ಟಿನಲ್ಲಿ ಈ ಪಂದ್ಯ ಸಾಕಷ್ಟು ಮಹತ್ವದ್ದೆನಿಸಿದೆ.
ಪಂಜಾಬ್ ಕಿಂಗ್ಸ್ ತಂಡವು ತನ್ನ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. ಇನ್ನು ಆರ್ಸಿಬಿ ತಂಡವು, ಲಖನೌ ಎದುರು ಭರ್ಜರಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದೆ.
ಉಭಯ ತಂಡಗಳು ಲೀಗ್ ಹಂತದ ಅಂತ್ಯದ ವೇಳೆಗೆ 14 ಪಂದ್ಯಗಳನ್ನಾಗಿ 9 ಗೆಲುವು ಸಹಿತ 19 ಅಂಕಗಳನ್ನು ಪಡೆದಿವೆ. ಆದರೆ ಆರ್ಸಿಬಿಗಿಂತ ಉತ್ತಮ ರನ್ ರೇಟ್ ಕಾಯ್ದುಕೊಂಡ ಪಂಜಾಬ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ, ಆರ್ಸಿಬಿ ಎರಡನೇ ಸ್ಥಾನದಲ್ಲಿದೆ.
ಇದೀಗ ಒಂದು ವೇಳೆ ಕ್ವಾಲಿಫೈಯರ್-1 ಪಂದ್ಯ ಮಳೆಯಿಂದ ರದ್ದಾದ್ರೆ? ಮುಂದೇನು ಎನ್ನುವ ಆತಂಕ ಕ್ರಿಕೆಟ್ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಯಾಕೆಂದರೆ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಯಾವುದೇ ಮೀಸಲು ದಿನ ನಿಗದಿ ಮಾಡಿಲ್ಲ.
ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದ್ರೆ ಲೀಗ್ ಹಂತದ ಅಂತ್ಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಪಂಜಾಬ್ ಕಿಂಗ್ಸ್ ತಂಡವು ನೇರವಾಗಿ ಫೈನಲ್ಗೆ ಲಗ್ಗೆಯಿಡಲಿದೆ. ಇನ್ನೊಂದೆಡೆ ಆರ್ಸಿಬಿ ತಂಡವು, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ-ಗುಜರಾತ್ ನಡುವಿನ ಪಂದ್ಯದಲ್ಲಿ ವಿಜೇತ ತಂಡದ ಎದುರು ಫೈನಲ್ ರೇಸ್ಗಾಗಿ ಸೆಣಸಾಡಬೇಕಾಗುತ್ತದೆ.
ಇನ್ನು ಹವಾಮಾನ ವರದಿಯ ಪ್ರಕಾರ ಮುಲ್ಲಾನಪುರ ಭಾಗದಲ್ಲಿ ಈಗ ಬೇಸಿಗೆಯ ಸಮಯವಾಗಿದ್ದು, ಪಂದ್ಯ ನಡೆಯುವ ದಿನವಾದ ಇಂದು ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಹೀಗಾಗಿ ಇಂದಿನ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಆದರೆ ಉಭಯ ತಂಡದಲ್ಲೂ ಟಿ20 ಸ್ಪೆಷಲಿಸ್ಟ್ ಬ್ಯಾಟರ್ಗಳ ದಂಡೇ ಇರುವುದರಿಂದ ರನ್ ಮಳೆ ಹರಿಯುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.