- Home
- Sports
- Cricket
- ಇಂದು RCB ಎದುರು ಜಸ್ಪ್ರೀತ್ ಬುಮ್ರಾ ಆಡ್ತಾರೋ ಇಲ್ವೋ? ಮಹತ್ವದ ಅಪ್ಡೇಟ್ ಕೊಟ್ಟ ಮುಂಬೈ ಹೆಡ್ಕೋಚ್ ಜಯವರ್ಧನೆ
ಇಂದು RCB ಎದುರು ಜಸ್ಪ್ರೀತ್ ಬುಮ್ರಾ ಆಡ್ತಾರೋ ಇಲ್ವೋ? ಮಹತ್ವದ ಅಪ್ಡೇಟ್ ಕೊಟ್ಟ ಮುಂಬೈ ಹೆಡ್ಕೋಚ್ ಜಯವರ್ಧನೆ
ಮುಂಬೈ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಮುಂಬೈ ಹೆಡ್ ಕೋಚ್ ಮಹೇಲಾ ಜಯವರ್ಧನೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.

18ನೇ ಆವೃತ್ತಿಯ ಐಪಿಎಲ್ ಟೂರ್ನಿಯ 20ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮುಂಬೈನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ.
Image Credit: ANI
ಗೆಲುವಿನ ಹಳಿಗೆ ಮರಳಲು ಪರದಾಡುತ್ತಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ಇದೀಗ ಆರ್ಸಿಬಿ ಎದುರು ಶತಾಯಗತಾಯ ಗೆದ್ದು ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ.
ಇನ್ನು ಸಾಕಷ್ಟು ಸಮಯದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ವೇಗದ ಅಸ್ತ್ರ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದು, ಪಾಂಡ್ಯ ಪಡೆಯ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಭಾನುವಾರವಷ್ಟೇ ಬುಮ್ರಾ ಮುಂಬೈ ಪಾಳಯ ಕೂಡಿಕೊಂಡಿದ್ದಾರೆ.
(Photo: IPL/BCCI)
ಇನ್ನು ಜಸ್ಪ್ರೀತ್ ಬುಮ್ರಾ, ಆರ್ಸಿಬಿ ಎದುರಿನ ಪಂದ್ಯಕ್ಕೆ ಕಣಕ್ಕಿಳಿಯುತ್ತಾರೆಯೇ ಅಥವಾ ಇಲ್ಲವೇ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಈ ಕುರಿತಂತೆ ಮುಂಬೈ ಇಂಡಿಯನ್ಸ್ ಕ್ರಿಕೆಟ್ ತಂಡದ ಹೆಡ್ಕೋಚ್ ಮಹೇಲಾ ಜಯವರ್ಧನೆ ಮಹತ್ವದ ಅಪ್ಡೇಟ್ ನೀಡಿದ್ದಾರೆ.
ಹೌದು, 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದ್ದು, ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದು ತಂಡದ ಆಯ್ಕೆಗೆ ಲಭ್ಯವಿರಲಿದ್ದಾರೆ ಎಂದಿದ್ದಾರೆ. ಈ ಮೂಲಕ ಇಂದು ಬುಮ್ರಾ ಆರ್ಸಿಬಿ ಎದುರಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
(Photo: ANI)
ಬುಮ್ರಾ ಆಯ್ಕೆಗೆ ಲಭ್ಯವಿರಲಿದ್ದಾರೆ. ಇದು ತವರಿನಲ್ಲಿ ನಾವು ಆಡುತ್ತಿರುವ ಎರಡನೇ ಮ್ಯಾಚ್ ಆಗಿದೆ. ಅವರು ಏಪ್ರಿಲ್ 05ರಿಂದಲೇ ನಮ್ಮನ್ನು ಕೂಡಿಕೊಂಡಿದ್ದಾರೆ. ಅವರು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ. ಆರ್ಸಿಬಿ ಎದುರು ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಬುಮ್ರಾ ಆಡಲಿದ್ದಾರೆ ಎಂದು ಜಯವರ್ಧನೆ ಹೇಳಿದ್ದಾರೆ.
ಒಂದು ಕಡೆ ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ ಒಂದು ಸೋಲು ಸಹಿತ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿದ 4 ಪಂದ್ಯಗಳ ಪೈಕಿ ಕೇವಲ ಒಂದು ಗೆಲುವು ಹಾಗೂ ಮೂರು ಸೋಲು ಸಹಿತ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನೊಂದು ಸೋಲು ಮುಂಬೈ ತಂಡದ ಪ್ಲೇ ಆಫ್ ಹಾದಿಯನ್ನು ಮತ್ತಷ್ಟು ದುರ್ಗಮಗೊಳಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.