ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಅರ್ಧ ಡಜನ್ ಆಟಗಾರರು ಫೇಲ್..!
ಬೆಂಗಳೂರು: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ತಂಡ ಪ್ರಕಟವಾದ ಬೆನ್ನಲ್ಲೇ ಐಪಿಎಲ್ ಆಡುತ್ತಿರುವ ಭಾರತ ತಂಡದ ಅರ್ಧ ಡಜನ್ ಆಟಗಾರರು ದಯನೀಯ ವೈಪಲ್ಯ ಅನುಭವಿಸುತ್ತಿರುವುದು ಟೀಂ ಇಂಡಿಯಾ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಸಾಕಷ್ಟು ಅಳೆದು ತೂಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದ್ದು, ನಿರೀಕ್ಷೆಯಂತೆಯೇ ರೋಹಿತ್ ಶರ್ಮಾಗೆ ನಾಯಕ ಪಟ್ಟ ಕಟ್ಟಲಾಗಿದೆ.
15 ಆಟಗಾರರ ತಂಡದಲ್ಲಿ ಅಚ್ಚರಿಯೆನ್ನುವಂತೆ ಕೆಲವು ಪ್ರತಿಭಾನ್ವಿತ ಆಟಗಾರರನ್ನು ಕೈಬಿಡಲಾಗಿದೆ. ಅದೇ ರೀತಿ ಫಾರ್ಮ್ ಇಲ್ಲದೇ ಇರುವ ಕೆಲವು ಆಟಗಾರರಿಗೆ ಆಯ್ಕೆ ಸಮಿತಿ ಮಣೆ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.
ಭಾರತ ತನ್ನ ಮೊದಲ ಪಂದ್ಯವನ್ನು ಜೂ.5ರಂದು ಐರ್ಲೆಂಡ್ ವಿರುದ್ಧ ಆಡಲಿದ್ದು, ಜೂ.9ರಂದು ನ್ಯೂಯಾರ್ಕ್ನಲ್ಲಿ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿದೆ. ಜೂ.12ರಂದು ಅಮೆರಿಕ, ಜೂ.15ರಂದು ಕೆನಡಾ ವಿರುದ್ಧ ಸೆಣಸಲಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್.
ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಆವೇಶ್ ಖಾನ್, ಖಲೀಲ್ ಅಹ್ಮದ್.
ಅರ್ಧದಷ್ಟು ಆಟಗಾರರು ಫೇಲ್:
1. ಹಾರ್ದಿಕ್ ಪಾಂಡ್ಯ:
ವಿಶ್ವಕಪ್ ಟೂರ್ನಿಗೆ ಔಟ್ ಆಫ್ ಫಾರ್ಮ್ನಲ್ಲಿರುವ ಹಾರ್ದಿಕ್ ಪಾಂಡ್ಯಗೆ ಮಣೆ ಹಾಕಲಾಗಿದೆ. ಇದಷ್ಟೇ ಅಲ್ಲದೇ ಉಪನಾಯಕ ಪಟ್ಟ ಬೇರೆ ಕಟ್ಟಲಾಗಿದೆ. ಲಖನೌ ಎದುರು ಶೂನ್ಯ ಸುತ್ತಿದ್ದ ಪಾಂಡ್ಯ, ಕೆಕೆಆರ್ ಎದುರು ಒಂದು ರನ್ ಗಳಿಸಿ ನಿರಾಸೆ ಅನುಭವಿಸಿದ್ದಾರೆ
2. ರೋಹಿತ್ ಶರ್ಮಾ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಇತ್ತೀಚೆಗೆ ಲಯ ಕಳೆದುಕೊಂಡಿದ್ದಾರೆ.ಲಖನೌ ಎದುರು 4 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದ ಹಿಟ್ಮ್ಯಾನ್, ಕೆಕೆಆರ್ ಎದುರು ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಹಿಟ್ಮ್ಯಾನ್ ಫಾರ್ಮ್ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿದೆ.
3. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಪ್ರೀಮಿಯರ್ ಆಲ್ರೌಂಡರ್ ರವೀಂದ್ರ ಜಡೇಜಾ ಫಾರ್ಮ್ ಕೂಡಾ ಉತ್ತಮವಾಗಿಲ್ಲ. ಪಂಜಾಬ್ ಎದುರು ಜಡ್ಡು ಕೇವಲ 2 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಜಡ್ಡು ಆದಷ್ಟು ಬೇಗ ಫಾರ್ಮ್ ಕಂಡುಕೊಳ್ಳಬೇಕಿದೆ.
4. ಆರ್ಶದೀಪ್ ಸಿಂಗ್
ಪಂಜಾಬ್ ಕಿಂಗ್ಸ್ ತಂಡದ ಎಡಗೈ ವೇಗಿ ಆರ್ಶದೀಪ್ ಸಿಂಗ್, ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ಬೆನ್ನಲ್ಲೇ ಸಿಎಸ್ಕೆ ಎದುರು 4 ಓವರ್ ಬೌಲಿಂಗ್ ಮಾಡಿ 52 ರನ್ ಚಚ್ಚಿಸಿಕೊಳ್ಳುವ ಮೂಲಕ ದುಬಾರಿಯಾಗಿದ್ದರು.
5. ಸಂಜು ಸ್ಯಾಮ್ಸನ್:
ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್, ಸನ್ರೈಸರ್ಸ್ ಹೈದರಾಬಾದ್ ಎದುರು ಮೂರು ಎಸೆತ ಎದುರಿಸಿ ಶೂನ್ಯ ಸುತ್ತಿದ್ದರು.
6. ಯುಜುವೇಂದ್ರ ಚಹಲ್:
ರಾಜಸ್ಥಾನ ರಾಯಲ್ಸ್ ತಂಡದ ಸ್ಪಿನ್ ಅಸ್ತ್ರ ಚಹಲ್, ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ಬೆನ್ನಲ್ಲೇ ಐಪಿಎಲ್ನಲ್ಲಿ ಅತಿ ದುಬಾರಿ ಸ್ಪೆಲ್ ಹಾಕಿದ್ದಾರೆ. ಸನ್ರೈಸರ್ಸ್ ಎದುರು ಚಹಲ್ 4 ಓವರ್ ಬೌಲಿಂಗ್ ಮಾಡಿ 62 ರನ್ ಚಚ್ಚಿಸಿಕೊಂಡಿದ್ದಾರೆ.
7. ಶಿವಂ ದುಬೆ:
ರಿಂಕು ಸಿಂಗ್ ಅವರನ್ನು ಹಿಂದಿಕ್ಕಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದ ಶಿವಂ ದುಬೆ ಪಂಜಾಬ್ ಎದುರು ಶೂನ್ಯ ಸಂಪಾದನೆ ಮಾಡಿದ್ದಾರೆ. ಬೌಲಿಂಗ್ನಲ್ಲಿ ದುಬೆ ಒಂದು ವಿಕೆಟ್ ಕಬಳಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.