- Home
- Sports
- Cricket
- ವಿಶ್ವಕಪ್ ಟ್ರೋಫಿ ಗೆಲ್ಲಲು ಭಾರತ ರೆಡಿ; ದಕ್ಷಿಣ ಆಫ್ರಿಕಾ ಎದುರಿನ ಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!
ವಿಶ್ವಕಪ್ ಟ್ರೋಫಿ ಗೆಲ್ಲಲು ಭಾರತ ರೆಡಿ; ದಕ್ಷಿಣ ಆಫ್ರಿಕಾ ಎದುರಿನ ಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!
ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟವಾಗಿದ್ದು, ಬಹುತೇಕ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

1. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕಳೆದೆರಡು ಪಂದ್ಯಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದು, ಇದೀಗ ಮಹತ್ವದ ಫೈನಲ್ ಪಂದ್ಯದಲ್ಲೂ ಹರಿಣಗಳ ಪಡೆ ಮೇಲೆ ಸವಾರಿ ಮಾಡಲು ಸಜ್ಜಾಗಿದ್ದಾರೆ.
2. ವಿರಾಟ್ ಕೊಹ್ಲಿ:
ಟೂರ್ನಿಯುದ್ದಕ್ಕೂ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಾ ಬಂದಿದ್ದರೂ, ಬಿಗ್ ಮ್ಯಾಚ್ ಪ್ಲೇಯರ್ ಆಗಿರುವ ವಿರಾಟ್ ಕೊಹ್ಲಿ, ಮತ್ತೊಮ್ಮೆ ಆರಂಭಿಕನಾಗಿ ಕಣಕ್ಕಿಳಿದರೆ ಅಚ್ಚರಿಯೇನಿಲ್ಲ.
3. ರಿಷಭ್ ಪಂತ್:
ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ರಿಷಭ್ ಪಂತ್ ಕಳೆದ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ಪಂತ್ ಯಾವುದೇ ಕ್ಷಣದಲ್ಲಿ ಬೇಕಿದ್ದರೂ ಸ್ಪೋಟಕ ಇನಿಂಗ್ಸ್ ಆಡಬಲ್ಲರು ಎನ್ನುವುದು ಗುಟ್ಟಾಗಿಯೇನು ಉಳಿದಿಲ್ಲ.
4. ಸೂರ್ಯಕುಮಾರ್ ಯಾದವ್:
ಭಾರತದ ತಾರಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೂಡಾ ಸದ್ಯ ಭರ್ಜರಿ ಲಯದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಕೇವಲ 3 ರನ್ ಅಂತರದಲ್ಲಿ ಅರ್ಧಶತಕದಿಂದ ವಂಚಿತರಾಗಿದ್ದ ಸೂರ್ಯ, ಅಪಾಯಕಾರಿ ಬ್ಯಾಟರ್.
5. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಆಗಿರುವ ಹಾರ್ದಿಕ್ ಪಾಂಡ್ಯ, ತಮ್ಮ ಅದ್ಭುತ ಲಯದ ಮೂಲಕವೇ ಎದುರಾಳಿ ಪಡೆಯನ್ನು ಕಂಗೆಡಿಸಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಪಾಂಡ್ಯ ತಂಡಕ್ಕೆ ಬಲ ತಂದುಕೊಟ್ಟಿದ್ದಾರೆ.
6. ಸಂಜು ಸ್ಯಾಮ್ಸನ್:
ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಮೇಲಿರಿಸಿದ ನಿರೀಕ್ಷೆ ಪದೇ ಪದೇ ಹುಸಿಯಾಗುತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ದುಬೆ ಬದಲಿಗೆ ಕೇರಳ ಮೂಲದ ಕ್ರಿಕೆಟಿಗ ಸಂಜು ಸ್ಯಾಮ್ಸನ್ಗೆ ಅವಕಾಶ ಸಿಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
7. ರವೀಂದ್ರ ಜಡೇಜಾ:
ಟೀಂ ಇಂಡಿಯಾದ ಉಪಯುಕ್ತ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡಾ ಬಿಗ್ ಮ್ಯಾಚ್ ಪ್ಲೇಯರ್. ಮಹತ್ವದ ಪಂದ್ಯದಲ್ಲಿ ಒತ್ತಡ ಮೆಟ್ಟಿನಿಂತು ಆಡುವ ಕಲೆ ಜಡೇಜಾಗೆ ಕರಗತವಾಗಿದೆ.
8. ಅಕ್ಷರ್ ಪಟೇಲ್:
ಟೀಂ ಇಂಡಿಯಾದ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್, ಸೆಮಿಫೈನಲ್ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ್ದರು. ಫೈನಲ್ನಲ್ಲೂ ಅಕ್ಷರ್ ಪಟೇಲ್ ಮಿಂಚುವ ವಿಶ್ವಾಸದಲ್ಲಿದ್ದಾರೆ.
9. ಕುಲ್ದೀಪ್ ಯಾದವ್:
ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿ ಗುರುತಿಸಿಕೊಂಡಿರುವ ಲೆಗ್ಸ್ಪಿನ್ನರ್ ಕುಲ್ದೀಪ್ ಯಾದವ್ ಕಳೆದ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿದ್ದರು. ಇಂದು ಕುಲ್ದೀಪ್ ಸ್ಪಿನ್ ಮೋಡಿ ಮಾಡಲು ರೆಡಿಯಾಗಿದ್ದಾರೆ.
10. ಆರ್ಶದೀಪ್ ಸಿಂಗ್:
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿರುವ ಎಡಗೈ ವೇಗಿ ಆರ್ಶದೀಪ್ ಸಿಂಗ್, ಇಂದು ಮತ್ತೊಮ್ಮೆ ಮಾರಕ ದಾಳಿ ನಡೆಸಲು ಸಜ್ಜಾಗಿದ್ದಾರೆ.
11. ಜಸ್ಪ್ರೀತ್ ಬುಮ್ರಾ:
ಟೀಂ ಇಂಡಿಯಾದ ಪ್ರಮುಖ ವೇಗದ ದಾಳಿಗಾರ ಜಸ್ಪ್ರೀತ್ ಬುಮ್ರಾ, ವಿಕೆಟ್ ಕಬಳಿಸುವುದರ ಜತೆಗೆ ಎದುರಾಳಿ ರನ್ ವೇಗಕ್ಕೂ ಕಡಿವಾಣ ಹಾಕುತ್ತಾ ಬಂದಿದ್ದಾರೆ. ಟೀಂ ಇಂಡಿಯಾ ಕಪ್ಗೆ ಮುತ್ತಿಕ್ಕಬೇಕಿದ್ದರೇ ಬುಮ್ರಾ ಮತ್ತೊಮ್ಮೆ ಅಸಾಧಾರಣ ಬೌಲಿಂಗ್ ಪ್ರದರ್ಶನ ತೋರಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.