ಧರ್ಮೇಗೌಡ ಆತ್ಮಹತ್ಯೆ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಸ್ಪೀಕರ್ ಓಂ ಬಿರ್ಲಾ!
ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಸಾವು ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷತ್ತಿನಲ್ಲಿ ನಡೆದ ಗಲಾಟೆ, ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉನ್ನತ ಮಟ್ಟದ ತನಿಖೆದೆ ಆದೇಶಿಸಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ನಿಧನಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಘಟನೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಧರ್ಮೆಗೌಡ ಸಾವು ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆ ತನಿಖೆ ನಡೆಸಲಿದೆ. ಹೀಗಾಗಿ ಉನ್ನತ ಮಟ್ಟದ ತನಿಖೆಗೆ ಆದೇಶಿಸುತ್ತಿದ್ದೇನೆ ಎಂದು ಓಂ ಬಿರ್ಲಾ ಹೇಳಿದ್ದಾರೆ.
ಧರ್ಮೇಗೌಡರ ಸಾವು ಪ್ರಕರಣವನ್ನು ಸ್ವತಂತ್ರ ಏಜೆನ್ಸಿಯ ಮೂಲಕ ಉನ್ನತ ಮಟ್ಟದ ತನಿಖೆ ನಡೆಸುವುದು ಅವಶ್ಯಕವಿದೆ ಎಂದು ಬಿರ್ಲಾ ಹೇಳಿದ್ದಾರೆ.
ಉಪಸಭಾಪತಿ ಧರ್ಮೆಗೌಡರ ಸಾವು ನೋವು ತಂದಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪ. ಧರ್ಮೆಗೌಡರು ಅಧ್ಯಕ್ಷರಾಗಿದ್ದಾಗ ವಿಧಾನಪರಿಷತ್ನಲ್ಲಿ ನಡೆದ ಘಟನೆ ದುರದೃಷ್ಟಕರ ಎಂದು ಬಿರ್ಲಾ ಹೇಳಿದ್ದಾರೆ.
ಈ ಗದ್ದಲ, ಗಲಾಟೆ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಇಂತಹ ಘಟನೆಗಳು ನಡೆದಿರುವುದು ಅತ್ಯಂತ ದುಃಖದ ಸಂಗತಿ ಎಂದು ಓಂ ಬಿರ್ಲಾ ಹೇಳಿದ್ದಾರೆ.
ಶಾಸಕಾಂಗ ಸಂಸ್ಥೆಗಳ ಪ್ರತಿಷ್ಠೆ , ಘನತೆ ಮತ್ತು ಅಧ್ಯಕ್ಷರ ಅಧಿಕಾರ ಹಾಗೂ ಸ್ವಾತಂತ್ರ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಿರ್ಲಾ ಹೇಳಿದ್ದಾರೆ.
ವಿಧಾನಸಭಾ ಪರಿಷತ್ ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಕಿತ್ತಾಡಿಕೊಂಡಿತ್ತು. ಈ ಗಲಾಟೆ ತಾರಕಕ್ಕೇರಿತ್ತು. ಉಪಸಭಾಪತಿಯನ್ನು ಅಧ್ಯಕ್ಷ ಸ್ಥಾನದಿಂದ ಎಳೆದೊಯ್ದ ದೃಶ್ಯ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ಘಟನೆ ಬಳಿಕ ಧರ್ಮೆಗೌಡರು ಮನ ನೊಂದಿದ್ದರು ಎನ್ನಲಾಗುತ್ತಿದೆ. ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು.