ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸುಧಾಕರ್
ಬೆಂಗಳೂರು(ಮಾ.11): ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಸಿಂಗಸಂದ್ರದಲ್ಲಿ ಬಾಶ್ ಕಂಪನಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಗ್ರಾಮೀಣ ಪ್ರದೇಶಗಳಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ಬಹಳ ಮುಖ್ಯ. ರೋಗಿಗಳು ಹೆಚ್ಚಾಗಿ ಬರುವ, ಹೆಚ್ಚು ಒತ್ತಡವಿರುವ ಕಡೆ ಮಾದರಿ ಆರೋಗ್ಯ ಕೇಂದ್ರ ಅಭಿವೃದ್ಧಿ ಮಾಡಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಬ್ಬರೇ ವೈದ್ಯರಿದ್ದರು. ಈ ವರ್ಷದಿಂದ ಒಬ್ಬ ಪುರುಷ ಹಾಗೂ ಒಬ್ಬ ಮಹಿಳಾ ವೈದ್ಯರನ್ನು ನಿಯೋಜಿಸಲಾಗುತ್ತದೆ. ಈ ರೀತಿಯ ಬದಲಾವಣೆ ತಂದು ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಆರೋಗ್ಯ ಇಲಾಖೆ ಸುಮಾರು 2.5 ಕೋಟಿ ರು. ಮತ್ತು ಬಾಷ್ ಕಂಪನಿಯ ಸಿಎಸ್ಆರ್ ನಿಧಿಯಡಿ 43 ಲಕ್ಷ ರು. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಬಾಶ್ ಕಂಪನಿಯವರು ಇನ್ನಷ್ಟುಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಸರ್ವಿಕಲ್ (ಗರ್ಭಕಂಠ)ದ ಕ್ಯಾನ್ಸರಿನ ಪರೀಕ್ಷೆ ಹಾಗೂ ಚಿಕಿತ್ಸೆಯ ಸಂಪೂರ್ಣ ಮಾಹಿತಿಯನ್ನು ನೀಡಿ ಅದರ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಆರೋಗ್ಯ ಹಾಗೂ ಆರೋಗ್ಯ ಶಿಕ್ಷಣ ಇಲಾಖೆಯು ಹಿಮೋಜೆನೋಮಿಕ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆಯೋಜಿಸಿದಿದ್ದ ಜಾಗೃತಿ ಅಭಿಯಾನಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬುಧವಾರ ವಿಧಾನಸೌಧದದಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು ವಿಧಾನ ಸೌಧದ ಎಲ್ಲ ಮಹಿಳಾ ನೌಕರ ಸಹೋದ್ಯೋಗಿಗಳು ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಮಾಹಿತಿಯನ್ನು ಪಡೆಯಬೇಕು ಎಂದು ಮನವಿ ಮಾಡಿದರು.
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಮಹಿಳೆಯರಲ್ಲಿ ಉಂಟಾಗುವ ಕ್ಯಾನ್ಸರುಗಳ ಪೈಕಿ ಗರ್ಭಕಂಠದ ಕ್ಯಾನ್ಸರ್ ಅನ್ನು ಪರೀಕ್ಷೆ ಹಾಗೂ ಚಿಕಿತ್ಸೆಯ ಮೂಲಕ ಪರಿಹರಿಸಬಹುದು ಎಂಬ ಮಾಹಿತಿಯನ್ನು ನೀಡುವುದು ಈ ಅಭಿಯಾನದ ಉದ್ದೇಶ.