ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜಧಾನಿ, ವರುಣನ ಆಟ ಇನ್ನೆಷ್ಟು ದಿನ?
ಬೆಂಗಳೂರು(ಅ. 23) ಧಾರಾಕಾರ ಮಳೆಗೆ ಬೆಂಗಳೂರು ಕೊಚ್ಚಿ ಹೋಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಸಂಜೆ ಧಾರಾಕಾರ ಮಳೆ ಸುರಿಯಿತು. ಮೆಜೆಸ್ಟಿಕ್, ಬಸವನಗುಡಿ, ಮಾರುಕಟ್ಟೆ, ಜಯನಗರ ಸೇರಿದಂತೆ ಎಲ್ಲ ಕಡೆ ಮಳೆಯಾಗಿದೆ.
ಹವಾಮಾನ ಇಲಾಖೆ ಮೊದಲೆ ಮಳೆ ಮುನ್ನೆಚ್ಚರಿಕೆಯನ್ನು ಬೆಂಗಳೂರಿಗರಿಗೆ ನೀಡಿತ್ತು .
ಮುಂದಿನ 24 ಗಂಟೆಯಲ್ಲಿಯೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕರ್ನಾಟಕದಲ್ಲಿ ಅಬ್ಬರಿಸುತ್ತಿದ್ದ ವರುಣ ಕೊಂಚ ತಗ್ಗಿದ್ದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
ಬೆಂಗಳೂರಿನ ರಸ್ತೆಗಳಲ್ಲಿ ನೀರು ತುಂಬಿಕೊಂಡು ಪ್ರಯಾಣಿಕರು ಹರಸಾಹಸ ಪಡಬೇಕಾಗಿ ಬಂತು.
ದಕ್ಷಿಣ ಬೆಂಗಳೂರಿನ ಬಸವನಗುಡಿ, ಹನುಮಂತನಗರ, ಕತ್ರಿಗುಪ್ಪೆ, ಪದ್ಮನಾಭನಗರ, ಜಯನಗರ, ಚಾಮರಾಜಪೇಟೆ ಭಾಗದಲ್ಲಿ ಮಳೆ ಅಬ್ಬರಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.