ಮುಂದಿನ 7 ದಿನ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ; ಬೆಂಗಳೂರಿನಲ್ಲಿಯೂ ವರುಣನ ಆರ್ಭಟ
ಮುಂದಿನ 7 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಧಾರಾಕಾರ ಮಳೆಯಿಂದ ಪ್ರವಾಸಿಗರಿಗೆ ತೊಂದರೆಯಾಗಿದೆ. ರಾಜ್ಯದ ಹಲವೆಡೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

7 ದಿನಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಮುಂದಿನ 7 ದಿನಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಜಂಟಿಯಾಗಿ ರಾಜ್ಯಕ್ಕೆ ಮಳೆಯ ಮುನ್ಸೂಚನೆ ನೀಡಿವೆ.

ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 25ರಂದು ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಆದರೆ, ಮೇ 28 ಮತ್ತು 30ರಂದು ರಾಜ್ಯದಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ.
ಬೆಂಗಳೂರಿನ ಹವಾಮಾನ ವರದಿ
ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ನಗರದಲ್ಲಿ ಪ್ರತಿದಿನ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮೋಡಗಳು ದಟ್ಟವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗರಿಷ್ಠ ಉಷ್ಣಾಂಶ 32°C
ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಳೆ ಬರುವ ಸಮಯದಲ್ಲಿ ನಗರದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಮುಂದಿನ 2 ದಿನಗಳ ಕಾಲ ಬೆಂಗಳೂರಿನ ಗರಿಷ್ಠ ಉಷ್ಣಾಂಶ 32°C ಹಾಗೂ ಕನಿಷ್ಠ ಉಷ್ಣಾಂಶ 22°C ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ.
ವಿಜಯನಗರ ಜಿಲ್ಲೆಯಲ್ಲಿ ಮಳೆ
ಜಿಲ್ಲೆಯಲ್ಲಿ ಶನಿವಾರ ರಾತ್ರಿ, ಭಾನುವಾರ ಬೆಳಗಿನಜಾವ ಸುರಿದ ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶ್ವವಿಖ್ಯಾತ ಹಂಪಿಯಲ್ಲಿ ಸಹ ಭಾರೀ ಮಳೆಯಿಂದಾಗಿ ಸ್ಮಾರಕಗಳ ಮುಂದೆ ಹಾಗೂ ಸ್ಮಾರಕಗಳಿಗೆ ತೆರಳುವ ರಸ್ತೆಯಲ್ಲಿ ಮಳೆ ನೀರು ನಿಂತು ಪ್ರವಾಸಿಗರ ಸಂಚಾರ ಅಡಚಣೆಯಾಯಿತು. ಹಂಪಿಯಲ್ಲಿ ಪ್ರವಾಸಿಗರು ಮಳೆ ನೀರಿನಲ್ಲಿ ಸಂಚರಿಸಿ ಹಂಪಿಯ ಸ್ಮಾರಕಗಳನ್ನು ವೀಕ್ಷಿಸಿದರು. ಹಂಪಿಯ ಸ್ಮಾರಕಗಳ ಬಳಿ ನೀರು ನಿಲ್ಲದೇ ಹರಿದು ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕಾಗಿತ್ತು. ಹಂಪಿಯ ರಸ್ತೆಗಳಲ್ಲಿ ತಗ್ಗುಗಳು ಬಿದ್ದು ರಸ್ತೆಯಲ್ಲಿ ಮಳೆ ನೀರು ನಿಲ್ಲುತ್ತಿರುವುದರಿಂದ ಕೆಲ ಪ್ರವಾಸಿಗರು ಬೇಸತ್ತು ಪ್ರವಾಸೋದ್ಯಮ ಮತ್ತು ಜಿಲ್ಲಾಡಳಿಕ್ಕೆ ಶಪಿಸಿಕೊಳ್ಳುತ್ತಿದ್ದರು.

