ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; ಕ್ರೂಸರ್-ಲಾರಿ ನಡುವೆ ಡಿಕ್ಕಿ
ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಫಾತದಲ್ಲಿ ಒಂದೇ ಕುಟುಂಬದ ಐವರ ಸಾವು
ರಾತ್ರಿ ಕ್ರೂಸರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಭೀಕರ ಅಪಘಾತ ಸಂಭವಿಸಿದೆ.

ಮೃತರು ಇಂಗಳಗಿ ಗ್ರಾಮದವರು
ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಕ್ರೂಸರ್ ಚಾಲಕ ಟೋಲು ಪಾಶಾ ( 27 ), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) , ಫಾತಿಮಾ (38) ಇನ್ನೊಬ್ಬ ಸೇರಿ ಐವರು ಸಾವನ್ನಪ್ಪಿದ್ದಾರೆ.
ಅಪಘಾತಕ್ಕೆ ಕಾರಣ ಏನು?
ಇಂಗಳಗಿಯಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಿ ಐವರು ಕ್ರೂಸರನಲ್ಲಿ ವಾಪಾಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ವಾಡಿ ಆಸ್ಪತ್ರೆಯಲ್ಲಿ ಶವಗಳು ಶಿಫ್ಟ್
ಘಟನಾ ಸ್ಥಳಕ್ಕೆ ವಾಡಿ ಪೊಲೀಸರು ಧಾವಿಸಿ, ಶವಗಳನ್ನು ವಾಡಿ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.ವಾಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಆಸ್ಪತ್ರೆಯತ್ತ ಮೃತರ ಕುಟುಂಬಸ್ಥರು ಜಮಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

