ಟಿಬಿ ಡ್ಯಾಂ ಬಳಿ ಟ್ಯಾಂಕರ್, ಟ್ರಾಕ್ಟರ್ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ 6 ಸಾವು
ವಿಜಯನಗರದ ಟಿಬಿ ಡ್ಯಾಂ ಬಳಿ ಟ್ರಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಲಾರಿ ಡಿಕ್ಕಿಯಾದ ಪರಿಣಾಮ ಸೇತುವೆಯಿಂದ ಎರಡು ವಾಹನ ಕೆಳಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಮೃತಪಟ್ಟರೆ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಟಿಬಿ ಡ್ಯಾಂ ಬಳಿ ಭೀಕರ ಅಪಘಾತ
ವಿಜಯನಗರ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆಯ ಟಿಬಿ ಡ್ಯಾಂ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟ್ರಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಲಾರಿ ಬಂದು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಟ್ರಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಘಟನೆ
ಹುಲಿಗೆಮ್ಮ ದೇವಸ್ಥಾನಕ್ಕೆ ಬ್ಯಾಟಿ ( ದೇವರು) ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಟ್ರಾಕ್ಟರ್ ಮೂಲಕ ಕುಟುಂಬಸ್ಥರು ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. 7 ಮೃತರೆಲ್ಲರೂ ಕೂಡ್ಲಿಗೆ ತಾಲೂಕಿನ ಮುರ್ಲಾಯನಹಳ್ಳಿ ಗ್ರಾಮದವರಾಗಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು
ಅಪಘಾತ ಸಂಭವಿಸಿದ ಬೆನ್ನಲ್ಲೇ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. 7 ಮಂದಿ ಮೃತಪಟ್ಟರೆ, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರ ಎಂಬ ವರದಿಗಳು ಬಂದಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸ್
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ, ಹೊಸಪೇಟೆ ಡಿವೈಎಸ್ಪಿ ಕೆಪಿ ಮುರುಳಿಧರ್ ಭೇಟಿ ನೀಡಿದ್ದಾರೆ. ಇದೇ ವೇಳೆ ಒಂದೇ ಕುಟುಂಬದ 7 ಮೃತರನ್ನು ಹೊಸಪೇಟೆ ಶವಾಗಾರಕ್ಕೆ ಸಾಗಿಸಲಾಗಿದೆ. ಪೊಲೀಸರು ಆಸ್ಪತ್ರೆಗೂ ಭೇಟಿ ನೀಡಿದ್ದಾರೆ.
ಕುಟುಂಬಸ್ಥರ ಆಕ್ರಂದನ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಧಾವಿಸಿದ್ದಾರೆ. ಆಪ್ತರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ನಡೆದಿದೆ. ಅಪಘಾತದಿಂದ ಸ್ಥಳದಲ್ಲೆ ಭಾರಿ ಟ್ರಾಫಿಕ್ ಜಾಮ್ ಸಂಭವಿಸಿತ್ತು.

