RSS ಬಗ್ಗೆ ಮಾತನಾಡೋ ಯೋಗ್ಯತೆ ಕಾಂಗ್ರೆಸ್, ಜೆಡಿಎಸ್ಗಿಲ್ಲ: ವಿಜಯೇಂದ್ರ
ಕೊಪ್ಪಳ(ಅ.22): ದೇಶ ಸೇವೆಯನ್ನೇ ತನ್ನ ಜೀವಾಳ ಮಾಡಿಕೊಂಡಿರುವ ಆರ್ಎಸ್ಎಸ್ ಕುರಿತು ಮಾತನಾಡುವ ಯೋಗ್ಯತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ನಗರದ ಗವಿಮಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಉಪ ಚುನಾವಣೆ ಇರುವುದರಿಂದ ಅಲ್ಪಸಂಖ್ಯಾತರ ಮತ ಒಲಿಸಿಕೊಳ್ಳಲು ಆರ್ಎಸ್ಎಸ್ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಆರ್ಎಸ್ಎಸ್ ಟೀಕೆ ಮಾಡಿದರೆ ದೊಡ್ಡ ಮನುಷ್ಯರಾಗುತ್ತಾರೆ, ಅಲ್ಪಸಂಖ್ಯಾತರ ಮತಗಳು ಬರುತ್ತವೆ, ಗೆಲ್ಲಲು ಸಹಕಾರಿಯಾಗುತ್ತದೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ ಎಂದ ವಿಜಯೇಂದ್ರ
ಈಗಾಗಲೇ ಕಾಂಗ್ರೆಸ್ ಸ್ಥಿತಿ ದೇಶದಲ್ಲಿ ಏನಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಾಗಿಯೇ ಇಂಥ ಕೀಳುಮಟ್ಟದ ಟೀಕೆ ಮಾಡುತ್ತಿದೆ. ದೇಶದ ಪ್ರಧಾನಿಯನ್ನೇ ಅಗೌರವದಿಂದ ಟೀಕೆ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಆರ್ಎಸ್ಎಸ್ ವಂತಿಗೆ ಸಂಗ್ರಹದ ಲೆಕ್ಕ ಕೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಕೆಲಸಕ್ಕೆ ಬಾರದ ಹೇಳಿಕೆಯ ಕುರಿತು ಉತ್ತರಿಸುವ ಅಗತ್ಯವಿಲ್ಲ. ವೈಯಕ್ತಿಕ ವಿಷಯಗಳ ಟೀಕೆಯನ್ನು ಪ್ರಾರಂಭಿಸಿದ್ದು ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ ಎನ್ನುವುದು ಜನರಿಗೆ ಗೊತ್ತಿದೆ ಎಂದರು.
ಬಿಜೆಪಿ ಹಾಗಲ್ಲ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ , ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿರುವ ಯೋಜನೆಗಳನ್ನು ಮುಂದಿಟ್ಟುಕೊಂಡು ನಾವು ಮತಯಾಚನೆ ಮಾಡುತ್ತೇವೆ. ಸಿಂದಗಿ ಹಾನಗಲ್ನಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.