2021ರ ಮೊದಲ ದಿನವೇ ರಾಜ್ಯಪಾಲರನ್ನ ಭೇಟಿ ಮಾಡಿದ ಸಿಎಂ
2021ರ ಮೊದಲ ದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಪಾಲ ವಾಜುಬಾಯಿ ವಾಲಾ ಅವರನ್ನ ಭೇಟಿ ಮಾಡಿದರು.ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ಹೂಗುಚ್ಛ ನೀಡಿ ಹೊಸ ವರ್ಷದ ಶುಭ ಕೋರಿದರು.
ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಹೂಗುಚ್ಛ ನೀಡಿ ನೂತನ ವರ್ಷದ ಶುಭಾಶಯಗಳನ್ನು ತಿಳಿಸಿದರು
ಇದಕ್ಕೆ ಪ್ರತಿಯಾಗಿ ರಾಜ್ಯಪಾಲರು ಕೂಡ ಸಿಎಂಗೆ ಶುಭಾಶಯ ಹೇಳಿದರು.
ಇಂದು (ಶುಕ್ರವಾರ) ಹೊಸ ವರ್ಷದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ ಶುಭಕೋರಿದ್ದಾರೆ. ಕುಟುಂಬ ಸಮೇತವಾಗಿ ಅಶ್ವತ್ಥ್ ನಾರಾಯಣ್ ಸಿಎಂಗೆ ಶುಭಾಶಯ ತಿಳಿಸಿದ್ದು ವಿಶೇಷವಾಗಿತ್ತು.
ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿರುವ ಪಿ.ರವಿಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ಭೇಟಿಯಾಗಿ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು.
ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ಭೇಟಿಯಾಗಿ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು.
ನಂತರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಅಧಿಕಾರಿ ವರ್ಗದವರು ಬಿಎಸ್ವೈ ಅವರಿಗೆ ನೂತನ ವರ್ಷದ ಶುಭ ಕೋರಿದರು.
ಈ ವೇಳೆ ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿಯವರು, ಜನಪರ ಆಡಳಿತ ನೀಡಬೇಕು. ಜನಪರವಾಗಿ ಕೆಲಸ ಮಾಡಿ. ನಿಮ್ಮ ಬೇಡಿಕೆ ಏನೇ ಇದ್ದರೂ ಸರ್ಕಾರ ಈಡೇರಿಸಲು ಸಿದ್ದವಿದೆ. ಸರ್ಕಾರಕ್ಕೆ ಹೆಸರು ತರುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ನಿಮಗೆ ಸದಾ ನಮ್ಮ ಬೆಂಬಲ ಇರುತ್ತದೆ ಎಂದು ಅಭಯ ನೀಡಿದರು.