ಬ್ರೇಕಿಂಗ್ ನ್ಯೂಸ್ ಕೊಟ್ಟ ಸಿಎಂ ಪುತ್ರ ಬಿ.ವೈ ವಿಜಯೇಂದ್ರ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಒಂದೇ ತಿಂಗಳಲ್ಲಿ 2ನೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವುದು ಭಾರೀ ಕುತೂಹಲ ಮೂಡಿಸಿದೆ. ಇದೀಗ ಇದರ ಹಿಂದಿನ ಗುಟ್ಟು ರಟ್ಟಾಗಿದ್ದು, ಈ ಕುರಿತಂತೆ ಅವರು ಇಂದು (ಬುಧವಾರ) ವಿಜಯೇಂದ್ರ ಅವರು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಒಂದೇ ತಿಂಗಳಲ್ಲಿ 2ನೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವುದರ ಹಿಂದಿನ ಗುಟ್ಟು ರಟ್ಟಾಗಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೀಗ ಎರಡನೇ ಬಾರಿಗೆ ಬಿ.ವೈ ವಿಜಯೇಂದ್ರ ಅವರು ಮೈಸೂರು ಪ್ರವಾಸ ಕೈಗೊಂಡಿರುವ ಹಿಂದನ ಕುತೂಹಲಕ್ಕೆ ತೆರೆ ಬಿದ್ದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮಂಡ್ಯದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದೆ. ಪಕ್ಷದ ಸಂಘಟನೆ ಬಗ್ಗೆ ಮುಂದೆ ಬರುವಂತೆ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳ ಬಗ್ಗೆ ಚರ್ಚಿಸಿದ್ದೇನೆ. ನನಗೆ ಪಕ್ಷ ಸಂಘಟನೆ ಬಹಳ ಮುಖ್ಯ'' ಎಂದರು.
ಮುಂದೆ ಬರುವಂತಹ ಗ್ರಾಮ ಪಂಚಾಯತಿ ಚುನಾವಣೆಗಳು ನಾಯಕತ್ವ ಸೃಷ್ಟಿ ಮಾಡುವಂತಹ ಚುನಾವಣೆಗಳಾದ್ದರಿಂದ ಪ್ರವಾಸ ಕೈಗೊಂಡಿದ್ದೇನೆ. ಪಕ್ಷದ ಕಾರ್ಯಕರ್ತರ ಮೇಲೆ ನಂಬಿಕೆ ಇದೆ. ಮುಂಬರುವ ಚುನಾವಣೆಗಳು ನಿಮ್ಮ ಚುನಾವಣೆ ಎಂದು ಎದುರಿಸಬೇಕು, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಕೊರತೆ ಇದೆ. ಆದ್ದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ಕೈಜೋಡಿಸಿ ಈ ಭಾಗದಲ್ಲಿ ಹೆಚ್ಚು ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ'' ಎಂದು ಹೇಳಿದರು.
ಕಳೆದ ಬಾರಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸೂಚನೆ ನೀಡಿ, ಕಡೆಯ ಗಳಿಗೆಯಲ್ಲಿ ಕ್ಷೇತ್ರ ಕೈ ಬಿಟ್ಟಿದ್ದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಐದು ಬಾರಿ ಭೇಟಿ ನೀಡಿದ್ದೇನೆ. ಶಿಕಾರಿಪುರ ಕ್ಷೇತ್ರಕ್ಕೆ ಎರಡು ಬಾರಿ ಭೇಟಿ ನೀಡಿದ್ದೇನೆ. ಅಂದಮೇಲೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಗೆ ನಿಲ್ಲುವ ಬಗ್ಗೆ ಸುಳಿವು ಕೊಟ್ಟರು.
ನನಗೆ ರಾಜಕೀಯ ಜನ್ಮ ನೀಡಿದ ವರುಣಾ ವಿಧಾನಸಭಾ ಕ್ಷೇತ್ರವನ್ನು ಮರೆಯಲಾಗುವುದಿಲ್ಲ. ಆದ್ದರಿಂದ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಇಲ್ಲೇ ಸ್ಪರ್ಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪಕ್ಷದ ಹೈಕಮಾಂಡ್ ಏನು ಸೂಚನೆ ನೀಡುತ್ತದೆ ಅದೇ ರೀತಿ ನಡೆದುಕೊಳ್ಳುತ್ತೇನೆ ಎನ್ನುವುದರ ಮೂಲಕ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸುಳಿವು ನೀಡಿದರು.
ಈ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ತಮ್ಮ ಮುಂದಿನ ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಾಗಿ ಮೈಸೂರು ಭಾಗಕ್ಕೆ ಆಧ್ಯತೆ ನೀಡುತ್ತಿದ್ದಾರೆ.