ಪೂಜೆ ಹೆಸರಲ್ಲಿ ದಿಲ್ಲಿಯಲ್ಲಿ ಕರ್ನಾಟಕ ಬಿಜೆಪಿ ರಾಜಕೀಯ ಹೈಡ್ರಾಮ..!
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಳಗಿಳಿಯಲಿದ್ದಾರೆ. ಇನ್ನೆರಡ್ಮೂರು ದಿನಗಳಲ್ಲಿ ಸಚಿವ ಸಂಪುಟದ ವಿಸ್ತರಣೆ ಆಗಲಿದೆ. ಇಲ್ಲ ಪುನರ್ರಚನೆ ಆಗಲಿದೆ ಎಂಬ ವಿಷಯಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದೆ. ಇದರ ಮಧ್ಯೆ ದೆಹಲಿಯಲ್ಲಿ ಬಿಜೆಪಿ ನಾಯಕರು ಪೂಜೆ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದು ಭಾರೀ ಕುತೂಹಲ ಮೂಡಿಸಿದೆ.
ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶಾಸಕ ಸಿ.ಟಿ. ರವಿ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಬಿಜೆಪಿ ಕಚೇರಿಯಲ್ಲಿ ತಮ್ಮ ಕಚೇರಿ ಪೂಜೆ ಮಾಡಿದರು.
ಈ ಕಾರ್ಯಕ್ರದಲ್ಲಿ ಸಚಿವರಾದ ಅಶೋಕ್, ಗೋವಿಂದ್ ಕಾರಜೋಳ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವು ಪಾಲ್ಗೊಂಡಿದ್ದಾರೆ.
ಆದ್ರೆ ರಾಜ್ಯದಲ್ಲಿ ಸಚಿವ ಸಂಪುಟ ಸಭೆಗೆ ಗೈರಾಗಿ ಈ ಭೇಟಿ ನಡೆಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಪೂಜೆ ನೆಪದಲ್ಲಿ ನಾಯಕರು ಹೈ ಕಮಾಂಡ್ ಭೇಟಿ ನಡೆಸಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಆದರೆ, ಇವರೆಲ್ಲರೂ ಪೂಜಾಕಾರ್ಯಕ್ಕೂ ಮೊದಲು ಅಥವಾ ನಂತರ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದರು
ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಆಗಿರುವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾದರು
ಅಲ್ಲದೇ ಲಕ್ಷ್ಮಣ ಸವದಿ ಅವರು ಕೇಂದ್ರ ರಕ್ಷಣಾ ಖಾತೆ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಆಗಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಅತ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ರಾಜ್ಯದಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಸಚಿವರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ರಮೇಶ್ ಜಾರಕಿಹೊಳಿ, ಆರ್. ಅಶೋಕ್, ಕೋಟಾ ಶ್ರೀನಿವಾಸ್ ಪೂಜಾರಿ ಸಂಪುಟ ಸಭೆಗೆ ಗೈರು ಹಾಜರಾಗಿ ಪೂಜೆ ನೆಪದಲ್ಲಿ ದೆಹಲಿಗೆ ಬಂದು ಸಂತೋಷ್ ಭೇಟಿಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.