ಸಿ. ಟಿ ರವಿ ಸಮ್ಮುಖದಲ್ಲಿ ಕಮಲ ಹಿಡಿದ ಖುಷ್ಬೂ, ಜುಲೈನಲ್ಲೇ ಕೊಟ್ಟಿದ್ರು ಸುಳಿವು!
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಹಾಗೂ ಪಂಚಭಾಷಾ ನಟಿ ಖುಷ್ಬೂ ಸುಂದರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಖುಷ್ಬೂ ಅಚಾನಕ್ಕಾಗಿ ಬಿಜೆಪಿಗೆ ಸೇರ್ಪಡೆಗೊಂಡಿಲ್ಲ. ಕಾಂಗ್ರೆಸ್ ಬಿಡುವ ಬಗ್ಗೆ ಅವರು ಕಳೆದ ಕೆಲ ತಿಂಗಳ ಹಿಂದೆಯೇ ಯೋಚಿಸಿದ್ದರು. ಈ ಬಗ್ಗೆ ಜುಲೈನಲ್ಲಿ ಸುಳಿವನ್ನೂ ನೀಡಿದ್ದರು. ಅದ್ಯತಾವ ಸುಳಿವು? ಇಲ್ಲಿದೆ ವಿವರ
ತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಂತೆಯೇ ನಟಿ ಖುಷ್ಬೂ ಸುಂದರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯ ಕೇಂದ್ರ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ , ಅಧಿಕೃತವಾಗಿ ಪಕ್ಷದ ಸದಸ್ಯತ್ವವನ್ನು ನೀಡುವ ಮೂಲಕ ಖುಷ್ಬೂ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ನೇತೃತ್ವದಲ್ಲಿ ನಟಿ ಖುಷ್ಬೂ ಪಕ್ಷದ ಬಲವರ್ದನೆಗೆ ಶ್ರಮಿಸಲಿದ್ದಾರೆ ಎಂಬ ವಿಶ್ವಾಸವಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವುದಾಗಿ ಸಿ. ಟಿ. ರವಿ ಹೇಳಿದ್ದಾರೆ.
ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ನಿರಾಸೆಗೊಂಡಿದ್ದ ಖುಷ್ಬೂ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ಭರವಸೆ ನೀಡಿದ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಂಡಿದ್ದ ಖುಷ್ಬೂ ಅವರು ಬಿಜೆಪಿಗೆ ಸೇರಲಿದ್ದಾರೆ ಅನ್ನುವ ಗಾಳಿ ಮಾತುಗಳು ಹರಿದಾಡಿದ್ದವು. ಇದಕ್ಕೆ ಸಂಬಂಧಪಟ್ಟಂತೆ ಖುಷ್ಬೂ ಕೂಡ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದರು.
ಬಿಜೆಪಿ ಸೇರಿದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಖುಷ್ಬೂ ಸುಂದರ್, ‘ನಾನು ಬಿಜೆಪಿಯಿಂದ ನಿರೀಕ್ಷೆ ಮಾಡೋದು ಪಕ್ಷ ನನಗೆ ಏನು ಕೊಡುಗೆ ನೀಡುತ್ತೆ ಅನ್ನೋದಲ್ಲ. ಬದಲಾಗಿ ದೇಶದ ಜನತೆಗಾಗಿ ಪಕ್ಷ ಏನು ಮಾಡುತ್ತೆ ಅನ್ನೋದಾಗಿದೆ. ದೇಶದ 128 ಕೋಟಿ ಜನರು ಒಬ್ಬ ವ್ಯಕ್ತಿಯ ಮೇಲೆ ಅಂದರೆ ನಮ್ಮ ಪ್ರಧಾನಿಯ ಮೇಲೆ ನಂಬಿಕೆ ಇಟ್ಟಿದ್ದಾರೆಂದರೆ ಖಂಡಿತವಾಗಿಯೂ ಅವರು ಸರಿಯಾದುದನ್ನೇ ಮಾಡುತ್ತಿದ್ದಾರೆ ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಕನ್ನಡ, ತಮಿಳು, ಹಿಂದಿ, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ನಟಿಸುವ ಮೂಲಕ ಪಂಚಭಾಷಾ ನಟಿ ಎನಿಸಿಕೊಂಡಿದ್ದ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಇದೀಗ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು.
ತಮಿಳು ಚಿತ್ರರಂಗದಲ್ಲಿ ಖ್ಯಾತ ನಟಿಯಾಗಿ ಮೆರೆದಿದ್ದ ಖುಷ್ಬೂ ಸದ್ಯಕ್ಕೆ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಖುಷ್ಬೂ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ಖೂಷ್ಬೂ ಮೂರು ತಿಂಗಳ ಹಿಂದೆ ಅಂದರೆ ಜುಲೈನಲ್ಲೇ ತಾವು ಬಿಜೆಪಿಗೆ ಸೇರುವ ಸುಳಿವು ನೀಡಿದ್ದರು. ಈ ಬಗ್ಗೆ ಏಷ್ಯಾನೆಟ್ ತಮಿಳು ವರದಿ ಮಾಡಿತ್ತಾದರೂ ಖುಷ್ಬೂ ಈ ವಿಚಾರವನ್ನು ಅಲ್ಲಗಳೆದಿದ್ದರು. ಆದರೀಗ ಅನುಮಾನದಂತೆಯೇ ಅವರು ಬಿಜೆಒಪಿಗೆ ಸೇರ್ಪಡೆಗೊಂಡಿದ್ದಾರೆ.