ಬಿಜೆಪಿ ರಾಷ್ಟ್ರೀಯ ನಾಯಕರ ಸಲಹೆಯಂತೆ ಕುಪೇಂದ್ರ ರೆಡ್ಡಿ ಕಣಕ್ಕೆ: ಎಚ್.ಡಿ.ಕುಮಾರಸ್ವಾಮಿ
ಬಿಜೆಪಿ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಅವರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು (ಫೆ.16): ಬಿಜೆಪಿ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಅವರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಒಬ್ಬ ಅಭ್ಯರ್ಥಿಗೆ ಮತ ಬೇಕಿದೆ. ಅವರಲ್ಲಿ ಹೆಚ್ಚಿನ ಮತಗಳಿವೆ. ನಮ್ಮಲ್ಲಿರುವ ಮತಗಳು ನಷ್ಟ ಆಗಬಾರದು ಎಂಬ ಉದ್ದೇಶದಿಂದ ಹೊಂದಾಣಿಕೆಯಲ್ಲಿ ಕುಪೇಂದ್ರರೆಡ್ಡಿ ಅವರನ್ನ ಕಣಕ್ಕಿಳಿಸಿದ್ದೇವೆ.
ಏನಾಗುತ್ತದೆಯೋ ಕಾದು ನೋಡೋಣ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಿಮಗೆ ಸಂಖ್ಯೆ ಬಗ್ಗೆ ಅನುಮಾನ ಯಾಕೆ? ಚುನಾವಣೆಯಲ್ಲಿ ಏನು ನಿರ್ಧಾರ ಆಗಲಿದೆ ನೋಡೋಣ ಎಂದು ತಿಳಿಸಿದರು.
ಜೆಡಿಎಸ್ ನಾಯಕರು ಚರ್ಚಿಸಿ ಕುಪೇಂದ್ರ ರೆಡ್ಡಿ ಕಣಕ್ಕೆ: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದರೆ ಜೆಡಿಎಸ್ ಕಾರ್ಯತಂತ್ರ ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ. ಜೆಡಿಎಸ್ ಪಕ್ಷ ಎನ್ಡಿಎ ಕೂಟಕ್ಕೆ ಸೇರಿದ ನಂತರ ಯಾವುದೇ ಹೋರಾಟ ಮತ್ತು ತೀರ್ಮಾನಗಳನ್ನು ಜಂಟಿಯಾಗಿಯೇ ತೆಗೆದುಕೊಳ್ಳುತ್ತಿದ್ದೇವೆ.
ಬುಧವಾರ ನಮ್ಮ ಕೇಂದ್ರದ ವರಿಷ್ಠರು ಮತ್ತು ಜೆಡಿಎಸ್ನ ರಾಜ್ಯದ ಹಿರಿಯರು ಚರ್ಚಿಸಿ ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರು ಎಂದು ವಿವರಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ- ಜೆಡಿಎಸ್ ಒಟ್ಟಾಗಿ ನಮ್ಮ ಅಭ್ಯರ್ಥಿ ಗೆಲ್ಲುವ ದೃಷ್ಟಿಯಿಂದ ತಂತ್ರಗಾರಿಕೆಯನ್ನು ಮುಂದಿನ ದಿನಗಳಲ್ಲಿ ರೂಪಿಸಲಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.