6 ತಿಂಗಳಲ್ಲಿ 472 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ: ಸಚಿವ ಪ್ರಿಯಾಂಕ್ ಖರ್ಗೆ
ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ, ವರ್ಗಾವಣೆ ಮಾಡುವ ಮಂತ್ರಿಯಾಗಿದ್ದೇನೆ.. .ಹೀಗಂತ ಹೇಳಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ.

ವಿಧಾನ ಪರಿಷತ್ (ಫೆ.15): ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ, ವರ್ಗಾವಣೆ ಮಾಡುವ ಮಂತ್ರಿಯಾಗಿದ್ದೇನೆ.. .ಹೀಗಂತ ಹೇಳಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ. ಗ್ರಾಮ ಪಂಚಾಯತ್ಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ಬಗ್ಗೆ ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಅಧಿಕಾರ ವಹಿಸಿಕೊಂಡ ಕಳೆದ ಆರು ತಿಂಗಳಲ್ಲಿ ವಿವಿಧ ಕಾರಣಗಳಿಗಾಗಿ 472 ಅಧಿಕಾರಿಗಳನ್ನುಸಸ್ಪೆಂಡ್ ಮಾಡಿದ್ದೇನೆ.
ಇಲ್ಲವೇ ಬೇರೆಡೆಗೆ ವರ್ಗಾವಣೆ ಮಾಡಿದ್ದೇನೆ, ಒಂದು ರೀತಿಯಲ್ಲಿ ಸಸ್ಪೆಂಡ್ ಹಾಗೂ ವರ್ಗಾವಣೆ ಮಾಡುವ ಮಂತ್ರಿಯಾಗಿದ್ದೇನೆ ಎಂದರು. ಅಧಿಕಾರಕ್ಕೆ ಬಂದ ಆರಂಭದಲ್ಲಿ ತಮ್ಮ ಬಳಿ ದೊಡ್ಡ ಪ್ರಮಾಣದ ಕಡತಗಳ ವಿಲೇವಾರಿ ಬಾಕಿ ಇತ್ತು. ಈಗ ಎಲ್ಲವನ್ನೂ ವಿಲೇವಾರಿ ಮಾಡಿದ್ದೇನೆ. ಒಂದೇ ಒಂದು ಕಡತ ಬಾಕಿ ಇಲ್ಲ. ಕೆಲವು ದಿನಗಳ ಹಿಂದೆ ಒಂದೇ ದಿನ 200ಕ್ಕೂ ಹೆಚ್ಚು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ಸಚಿವರು ಹೇಳಿದರು.
ಆಡಳಿತ ಸುಧಾರಣೆಗೆ ಗ್ರಾಪಂಗಳಿಗೆ ರೇಟಿಂಗ್ ವ್ಯವಸ್ಥೆ: ಪಂಚಾಯಿತಿಗಳು ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಸರ್ಕಾರ ಹಲವು ಕ್ರಮ ಕೈಗೊಳ್ಳಲಾಗಿದೆ, ಪ್ರಮುಖವಾಗಿ ಗ್ರಾ.ಪಂ. ಸದಸ್ಯರಿಗೆ ತರಬೇತಿ, ಕೆಡಿಪಿ ಸಭೆಗಳಲ್ಲಿ ಹಿರಿಯ ಅಧಿಕಾರಿಗಳು ಕಡ್ಡಾಯ ಭಾಗಿ, ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳ ಸೇರ್ಪಡೆ, ಪಿಡಿಒಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಹಾಗೂ ಗ್ರಾ.ಪಂ.ಗಳಿಗೆ ಗ್ರೇಡಿಂಗ್ ಕೊಡುವ ಪದ್ಧತಿ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ನಿಯಮ 330ರ ಮೇರೆಗೆ ಕಾಂಗ್ರೆಸ್ನ ಮಂಜುನಾಥ್ ಭಂಡಾರಿ, ಅನಿಲ್ಕುಮಾರ್, ಬಿಜೆಪಿಯ ಡಿ.ಎಸ್. ಅರುಣ್, ನವೀನ್, ಕೇಶವಪ್ರಸಾದ್, ಗೋಪಿನಾಥ್ ರೆಡ್ಡಿ ಜೆಡಿಎಸ್ನ ಮಂಜೇಗೌಡ ಮುಂತಾದವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ವಿಕೇಂದ್ರಿಕರಣದ ಮೂಲಕ ವಿವಿಧ ಇಲಾಖೆಗಳ ಅಧಿಕಾರಗಳನ್ನು ಪಂಚಾಯಿತಿಗಳಿಗೆ ನೀಡಲಾಗಿದೆ. ಗ್ರಾ.ಪಂ.ನಲ್ಲಿ ಕಡ್ಡಾಯವಾಗಿ ಕೆಡಿಪಿ ಸಭೆ ನಡೆಸಿ ಹಿರಿಯ ಅಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಸೂಚಿಸಲಾಗಿದೆ. ಬಾಪೂಜಿ ಕೇಂದ್ರಗಳನ್ನು ಇನ್ನಷ್ಟು ಬಲಿಷ್ಠ ಮಾಡಲಾಗುವುದು. ಪಂಚಾಯಿತಿಗಳ ವಿದ್ಯುತ್ ಬಿಲ್ ದೊಡ್ಡ ಸಮಸ್ಯೆಯಾಗಿರುವುದರಿಂದ ಬೀದಿ ದೀಪಗಳನ್ನು ಸೋಲಾರ್ಗೆ ಪರಿವರ್ತಿಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.