- Home
- Entertainment
- Sandalwood
- ದುನಿಯಾ ವಿಜಯ್ 'ಲ್ಯಾಂಡ್ ಲಾರ್ಡ್'ಗೆ ತೆರಿಗೆ ವಿನಾಯಿತಿ ಕೊಟ್ಟ ಸರ್ಕಾರ; ಸಿದ್ದರಾಮಯ್ಯ ಮೆಚ್ಚಿದ ಸಿನಿಮಾ!
ದುನಿಯಾ ವಿಜಯ್ 'ಲ್ಯಾಂಡ್ ಲಾರ್ಡ್'ಗೆ ತೆರಿಗೆ ವಿನಾಯಿತಿ ಕೊಟ್ಟ ಸರ್ಕಾರ; ಸಿದ್ದರಾಮಯ್ಯ ಮೆಚ್ಚಿದ ಸಿನಿಮಾ!
ದುನಿಯಾ ವಿಜಯ್ ಅಭಿನಯದ, ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆಯಂತಹ ಗಂಭೀರ ವಿಷಯಗಳನ್ನು ಆಧರಿಸಿದ 'ಲ್ಯಾಂಡ್ ಲಾರ್ಡ್' ಚಿತ್ರಕ್ಕೆ ಕರ್ನಾಟಕ ಸರ್ಕಾರವು ಶೇ.100ರಷ್ಟು ತೆರಿಗೆ ವಿನಾಯಿತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದ ಸಾಮಾಜಿಕ ಸಂದೇಶವನ್ನು ಮೆಚ್ಚಿ ಈ ನಿರ್ಧಾರ ಕೈಗೊಂಡಿದೆ.

ಬೆಂಗಳೂರು (ಫೆ.02): ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅಭಿನಯದ ಬಹುನಿರೀಕ್ಷಿತ 'ಲ್ಯಾಂಡ್ ಲಾರ್ಡ್' (Land Lord) ಚಲನಚಿತ್ರಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆಯಂತಹ ಗಂಭೀರ ವಿಷಯವಸ್ತುವನ್ನು ಹೊಂದಿರುವ ಈ ಚಿತ್ರಕ್ಕೆ ಶೇ.100ರಷ್ಟು ತೆರಿಗೆ ವಿನಾಯಿತಿ (Tax Exemption) ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ನಟ ದುನಿಯಾ ವಿಜಯ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ತಮ್ಮ ಮುಂಬರುವ 'ಲ್ಯಾಂಡ್ ಲಾರ್ಡ್' ಚಿತ್ರದ ಕಥಾಹಂದರ, ಉದ್ದೇಶ ಮತ್ತು ಸಮಾಜಕ್ಕೆ ನೀಡುತ್ತಿರುವ ಸಂದೇಶದ ಕುರಿತು ವಿವರವಾಗಿ ಚರ್ಚಿಸಿದ್ದರು. ಚಿತ್ರವು ಕೇವಲ ಮನರಂಜನೆಗಾಗಿ ಸೀಮಿತವಾಗಿರದೆ, ಗ್ರಾಮೀಣ ಭಾಗದ ಫ್ಯೂಡಲ್ ವ್ಯವಸ್ಥೆ, ಜಾತಿ ಪದ್ಧತಿಯ ಕರಾಳ ಮುಖ ಮತ್ತು ಶೋಷಿತರ ಪರವಾಗಿ ಧ್ವನಿ ಎತ್ತುವ ಪ್ರಯತ್ನ ಮಾಡಿದೆ ಎಂದು ಸಿಎಂ ಗಮನಕ್ಕೆ ತಂದಿದ್ದರು.
ದುನಿಯಾ ವಿಜಯ್ ಅವರ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು, ಚಿತ್ರದ ಆಶಯಕ್ಕೆ ತಲೆದೂಗಿದ್ದಾರೆ. 'ಸಮಾಜದಲ್ಲಿ ಬೇರೂರಿರುವ ಅಸಮಾನತೆ ಮತ್ತು ಜಾತಿ ಶೋಷಣೆಯ ವಿರುದ್ಧ ಧ್ವನಿ ಎತ್ತುವ ಇಂತಹ ಸಿನಿಮಾಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಆದ್ಯ ಕರ್ತವ್ಯ. ಸಮಾನತೆಯ ಆಶಯವನ್ನು ಬಿತ್ತಲು ಹೊರಟಿರುವ ಇಂತಹ ಪ್ರಯತ್ನಗಳಿಗೆ ಬೆಂಬಲ ನೀಡಲೇಬೇಕು' ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕೂಡಲೇ ಸ್ಥಳದಲ್ಲೇ ಇದ್ದ ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, 'ಲ್ಯಾಂಡ್ ಲಾರ್ಡ್ ಚಿತ್ರದ ಕಥಾವಸ್ತುವನ್ನು ಪರಿಗಣಿಸಿ, ಕೂಡಲೇ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆಯನ್ನು ಆರಂಭಿಸಿ' ಎಂದು ನಿರ್ದೇಶನ ನೀಡಿದರು. ಸರ್ಕಾರದ ಈ ನಿರ್ಧಾರದಿಂದಾಗಿ ಕಡಿಮೆ ದರದಲ್ಲಿ ಟಿಕೆಟ್ ಲಭ್ಯವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನಸಾಮಾನ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಲು ಸಹಕಾರಿಯಾಗಲಿದೆ.
ದುನಿಯಾ ವಿಜಯ್ ಅವರು ಈ ಚಿತ್ರದಲ್ಲಿ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಈಗಾಗಲೇ ಕುತೂಹಲ ಮೂಡಿದೆ. ಭೂಮಾಲೀಕರು ಮತ್ತು ಶ್ರಮಜೀವಿಗಳ ನಡುವಿನ ಸಂಘರ್ಷ, ಸಾಮಾಜಿಕ ನ್ಯಾಯಕ್ಕಾಗಿ ನಡೆಯುವ ಹೋರಾಟವನ್ನು ಈ ಸಿನಿಮಾ ಎತ್ತಿ ಹಿಡಿದಿದೆ ಎನ್ನಲಾಗಿದೆ. ಬಸವಣ್ಣನವರ ತತ್ವ ಮತ್ತು ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಕಥಾಹಂದರವನ್ನು ಸಿನಿಮಾ ಹೊಂದಿದೆ.
ಸರ್ಕಾರದ ಈ ನಿರ್ಧಾರಕ್ಕೆ ಚಿತ್ರತಂಡ ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಕಳಕಳಿಯ ಚಿತ್ರಗಳಿಗೆ ಸರ್ಕಾರ ಬೆನ್ನೆಲುಬಾಗಿ ನಿಂತಿರುವುದಕ್ಕೆ ದುನಿಯಾ ವಿಜಯ್ ಅವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹಿಂದೆ ಕೂಡ ಉತ್ತಮ ಸಂದೇಶವಿರುವ ಚಿತ್ರಗಳಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರಿಗೆ ವಿನಾಯಿತಿ ನೀಡಿ ಪ್ರೋತ್ಸಾಹಿಸಿತ್ತು. ಈಗ ಆ ಸಾಲಿಗೆ 'ಲ್ಯಾಂಡ್ ಲಾರ್ಡ್' ಕೂಡ ಸೇರ್ಪಡೆಯಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

