ಶಾಸಕ ಚಂದ್ರು ಲಮಾಣಿ 5 ಲಕ್ಷ ರೂ. ಪ್ರಕರಣದಲ್ಲಿ ಮುಜುಗರದಿಂದ ಪಾರಾಗಲು ಬಿಜೆಪಿ ಪ್ಲಾನ್
ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿರುವ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಪ್ರಕರಣದಿಂದ ಉಂಟಾದ ಮುಜುಗರವನ್ನು ತಪ್ಪಿಸಿಕೊಳ್ಳಲು ಮತ್ತು ಮುಂಬರುವ ಬಜೆಟ್ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕುವುದನ್ನು ತಪ್ಪಿಸಲು ಪಕ್ಷ ಈ ಕ್ರಮಕ್ಕೆ ಮುಂದಾಗಿದೆ.

ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ
ಗುತ್ತಿಗೆದಾರನಿಂದ ಐದು ಲಕ್ಷ ರು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿರುವ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ರಾಜ್ಯ ಬಿಜೆಪಿ ಶೋಕಾಸ್ ನೋಟಿಸ್ ನೀಡುವ ಸಾಧ್ಯತೆಯಿದೆ.
ಚಂದ್ರ ಲಮಾಣಿಗೆ ನೋಟಿಸ್
ಈ ಪ್ರಕರಣದಿಂದ ರಾಜ್ಯ ಬಿಜೆಪಿ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಸಾಲು ಸಾಲು ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ಸ್ವಪಕ್ಷದ ಶಾಸಕನೇ ಲಂಚ ಸ್ವೀಕಾರದ ಆರೋಪದಡಿ ಜೈಲು ಸೇರಿರುವುದು ರಾಜ್ಯ ಬಿಜೆಪಿಗೆ ಮುಖಭಂಗ ಉಂಟು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿಯು ಲೋಕಾಯುಕ್ತ ಪೊಲೀಸರ ದಾಳಿ ಮತ್ತು ಲಂಚ ಸ್ವೀಕಾರದ ಆರೋಪ ಸಂಬಂಧ ಸ್ಪಷ್ಟನೆ ಕೇಳಿ ಶಾಸಕ ಚಂದ್ರ ಲಮಾಣಿಗೆ ನೋಟಿಸ್ ನೀಡಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಸ್ಪಷ್ಟನೆ ಕೇಳಿ ನೋಟಿಸ್ ನೀಡಲು ಪ್ಲಾನ್
ಈ ಸಂಬಂಧ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸೌಧದ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಕೆಲ ಕಾಲ ಚರ್ಚಿಸಿದ್ದಾರೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ಆಡಳಿತ ಪಕ್ಷವು ಈ ಪ್ರಕರಣವನ್ನು ಪ್ರಸ್ತಾಪಿಸಿ ವಿರೋಧ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ. ಈ ಮುಜುಗರಿಂದ ಪಾರಾಗಲು ಆರೋಪಿತ ಶಾಸಕನಿಗೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಲು ಮುಂದಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಜೆಟ್ ಅಧಿವೇಶನ
ಮಾರ್ಚ್ ಮೊದಲ ವಾರ ಬಜೆಟ್ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ: ಟ್ರ್ಯಾಪ್ ಆಗಿರೋ ಚಂದ್ರು ಲಮಾಣಿಗೆ ಏಕೆ ಬೇಲ್ ಕೊಡಬೇಕು? ತುರ್ತು ವಿಚಾರಣೆ ಕೇಳಿದ್ದಕ್ಕೆ ಜಡ್ಜ್ ಗರಂ
ಬಜೆಟ್ ಅಧಿವೇಶನ
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್ ಅಧಿವೇಶನದಲ್ಲಿ ಯಾವ ರೀತಿ ಸದನವನ್ನು ಎದುರಿಸಬೇಕು, ರಾಜ್ಯದಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ವೇಳೆಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ಆರ್.ಅಶೋಕ್ ಮತ್ತು ಪಕ್ಷದ ಪ್ರಮುಖರೊಂದಿಗೆ ಚರ್ಚಿಸುವುದಾಗಿಯೂ ಅವರು ಹೇಳಿದರು.
ಇದನ್ನೂ ಓದಿ: Mandya: ಲವ್ ಮ್ಯಾರೇಜ್ಗೆ ಸಹಾಯ; ಯುವತಿ ತಂದೆಯಿಂದ ಸೈಜ್ ಗಲ್ಲಿನಿಂದ ಕಾಲು ಜಜ್ಜಿ ಕ್ರೌರ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

