ಪೊಲೀಸರು ಮತ್ತಷ್ಟು ಜನಸ್ನೇಹಿ ಆಗಬೇಕು: ಸಿಎಂ ಯಡಿಯೂರಪ್ಪ
ಬೆಂಗಳೂರು(ನ.21): ಪೊಲೀಸರ ಮನೋಸ್ಥೈರ್ಯ ಹೆಚ್ಚಿಸಿ ನಿಸ್ವಾರ್ಥ ಸೇವೆ ಸಲ್ಲಿಸುವುದಕ್ಕೆ ಉತ್ತೇಜಿಸಲು ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಅದಕ್ಕೆ ಪೂರಕವಾಗಿ ಪೊಲೀಸರು ಸಹ ಮತ್ತಷ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ 2017-18ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಪೊಲೀಸರಿಗೆ ಪದಕ ಪ್ರದಾನ ಮಾಡಿದ ಸಿಎಂ ಯಡಿಯೂರಪ್ಪ
ಕರ್ತವ್ಯದ ವೇಳೆ ಪ್ರಾಣದ ಹಂತು ತೊರೆದು ಕರ್ತವ್ಯ ನಿರ್ವಹಿಸಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಪೊಲೀಸರಿಗೆ 10 ಸಾವಿರ ರು. ನಗದು ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದ ಸಿಎಂ
ಪ್ರಾಮಾಣಿಕ ಅಧಿಕಾರಿಗಳ ನಿಸ್ವಾರ್ಥ ಸೇವೆಯಿಂದ ಸರ್ಕಾರ ಮತ್ತು ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಪಡೆಗೆ ದಕ್ಷ, ವಿಶ್ವಾಸರ್ಹತೆ ಎಂಬ ಹೆಸರು ಇದೆ. ನಕ್ಸಲ್ ಚಟುವಟಿಕೆ, ಕಳ್ಳತನ, ಮತೀಯ ಶಕ್ತಿಗಳ ನಿಯಂತ್ರಣ, ಕಾನೂನು ಬಾಹಿರ ಚಟುವಟಿಕೆಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕಲು ಪೊಲೀಸರು ಮಾಡುತ್ತಿರುವ ಸೇವೆಯು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ
ಮುಖ್ಯಮಂತ್ರಿಗಳು 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ಅನುಮತಿ ನೀಡಿದ್ದಾರೆ. ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಕಟ್ಟಡಗಳು ಸೇರಿದಂತೆ ಹಲವು ಕಟ್ಟಡಗಳ ನವೀಕರಣಗೊಳ್ಳುತ್ತಿದೆ. ಆಧುನಿಕ ತಂತ್ರ ಬರುತ್ತಿರುವುದರಿಂದ ತಂತ್ರಜ್ಞಾನ ದುರ್ಬಳಕೆ ಸಹ ಆಗುತ್ತಿದೆ. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಅವುಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಇದೇ ವೇಳೆ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಕಾನ್ಸಸ್ಟೇಬಲ್, ಪೊಲೀಸ್ ಅಧಿಕಾರಿಗಳು ಸೇರಿ 237 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.