ಧರ್ಮಸ್ಥಳ ಕೇಸ್ನಲ್ಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡು ಸಂಸದ ಶಶಿಕಾಂತ್ ಸೆಂಥಿಲ್ ದಾಖಲಿಸಿದ ಮಾನನಷ್ಟ ಮೊಕದ್ದಮೆ ಸಂಬಂಧ ನ್ಯಾಯಾಲಯವು ರೆಡ್ಡಿಗೆ ಸಮನ್ಸ್ ಜಾರಿ ಮಾಡಿದೆ. ರಾಜಕೀಯ ದ್ವೇಷದಿಂದ ರೆಡ್ಡಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜನಾರ್ದನ ರೆಡ್ಡಿ
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಮಿಳುನಾಡು ಸಂಸದ ಶಶಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ಸಂಬಂಧ ರೆಡ್ಡಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಶಶಿಕಾಂತ್ ಸೆಂಥಿಲ್
ಧರ್ಮಸ್ಥಳಕ್ಕೆ ಕಳಂಕ ತರುವ ಪಿತೂರಿಯ ಹಿಂದಿನ ರೂವಾರಿ ಶಶಿಕಾಂತ್ ಸೆಂಥಿಲ್ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಈ ಬಗ್ಗೆ ತಮಿಳುನಾಡಿನ ತಿರುವಳ್ಳೂರು ಸಂಸದ ಸೆಂಥಿಲ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ರೆಡ್ಡಿ ಅವರಿಗೆ ಮಂಗಳವಾರ ಸಮನ್ಸ್ ಜಾರಿಗೊಳಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಆಗಸ್ಟ್ 24ಕ್ಕೆ ಮುಂದೂಡಿಕೆ
ರೆಡ್ಡಿ ವಿರುದ್ಧದ ಆಪಾದನೆಗಳ ತನಿಖೆಗೆ ಪರಿಗಣಿಸಿ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಆರೋಪಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆಯನ್ನು ಬರುವ ಆ.24ಕ್ಕೆ ಮುಂದೂಡಿದರು.
ಇದನ್ನೂ ಓದಿ: ಗ್ರಾಮ ಪಂಚಾಯಿತಿಗೆ ಕಸದ ಉಡುಗೊರೆ; ಗ್ರಾಮಸ್ಥರ ವಿರುದ್ಧವೇ ದೂರು ದಾಖಲಿಸಲು ಸೂಚಿಸಿದ ಅಧಿಕಾರಿ
ಸೆಂಥಿಲ್ ದೂರಿನಲ್ಲಿ ಏನಿದೆ?
ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಉಲ್ಲೇಖಿಸಿ ಆಧಾರಹಿತ ಸುಳ್ಳು ಆರೋಪ ಮಾಡಿದ್ದಾರೆ. ನಾನು ಈ ಹಿಂದೆ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಬಳ್ಳಾರಿಯಲ್ಲಿ ರೆಡ್ಡಿ ಎಸಗಿದ್ದ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಇಸಿ ಮತ್ತು ಸಿಬಿಐಗೆ ನೆರವು ನೀಡಿದ್ದೆ. ಹಲವು ಅಕ್ರಮಗಳನ್ನು ಬಯಲು ಮಾಡಿದ್ದೆ. ಇದರಿಂದ, ಜನಾರ್ದನ ರೆಡ್ಡಿ ದ್ವೇಷ ಸಾಧಿಸುತ್ತಿದ್ದರು ಎಂದು ಸೆಂಥಿಲ್ ದೂರಿನಲ್ಲಿ ಆರೋಪಿಸಿದ್ದಾರೆ.
ಏನಿದು ಪ್ರಕರಣ?
ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಶಶಿಕಾಂತ್ ಸೆಂಥಿಲ್ ಇದ್ದಾರೆ. ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡುವುದು ಸೇರಿದಂತೆ ಈ ಷಡ್ಯಂತ್ರದ ಭಾಗವಾಗಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಸೆಂಥಿಲ್ ಜನಾರ್ದನ ರೆಡ್ಡಿ ವಿರುದ್ದ ಮಾನನಷ್ಟ ಕೇಸ್ ದಾಖಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಕಾನ್ನಿಜೆನ್ಸ್ ತೆಗೆದುಕೊಂಡು ಆರೋಪಿ ಜನಾರ್ದನ ರೆಡ್ಡಿಗೆ ಆ.24ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

