ಬೆಂಗಳೂರು ಗಲಭೆ: ಅನಿವಾರ್ಯವಾಗಿ ಕಿಡಿಗೇಡಿಗಳಿಗೆ ಗುಂಡು, ಸಚಿವ ಬೊಮ್ಮಾಯಿ
ಬೆಂಗಳೂರು(ಆ.13): ಪರಿಸ್ಥಿತಿ ನಿಯಂತ್ರಿಸಲು ಹಲವು ರೀತಿಯಲ್ಲಿ ಯತ್ನಿಸಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕಿಡಿಗೇಡಿಗಳ ಮೇಲೆ ಗುಂಡು ಹಾರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಗಲಭೆ ನಡೆದ ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರೊಂದಿಗೆ ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.
ಈ ವೇಳೆಯೂ ದುಷ್ಕರ್ಮಿಗಳು ಚದುರದಿದ್ದಾಗ ಅನಿವಾರ್ಯವಾಗಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಮೂವರು ಅಸುನೀಗಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.