- Home
- News
- State
- ನ್ಯಾ. ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ 'ಹೆಲ್ತ್ ಬುಲೆಟಿನ್' ಬಿಡುಗಡೆ; ವೈದ್ಯರು ಹೇಳಿದ್ದೇನು?
ನ್ಯಾ. ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ 'ಹೆಲ್ತ್ ಬುಲೆಟಿನ್' ಬಿಡುಗಡೆ; ವೈದ್ಯರು ಹೇಳಿದ್ದೇನು?
ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ವೇದಿಕೆಯಲ್ಲೇ ಕುಸಿದುಬಿದ್ದರು. ಸ್ಪೀಕರ್ ಯು.ಟಿ. ಖಾದರ್ ಅವರು ತಕ್ಷಣವೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ಹೆಗ್ಡೆ
ಬೆಂಗಳೂರು (ಏ.03): ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಆರಂಭದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದರೂ, ವೈದ್ಯಕೀಯ ತಪಾಸಣೆಯ ಬಳಿಕ ಅವರು ಸುರಕ್ಷಿತವಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಘಟನೆ ನಡೆದಿದ್ದು ಹೇಗೆ?
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಅವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮಧ್ಯೆ ಅವರಿಗೆ ಎರಡು ಬಾರಿ ವಾಂತಿಯಾಗಿದ್ದು, ತೀವ್ರ ಸುಸ್ತು ಅನುಭವಿಸಿದ್ದಾರೆ. ಇದರಿಂದ ಅವರು ಮನೆಗೆ ಮರಳಲು ನಿರ್ಧರಿಸಿ ವೇದಿಕೆಯಿಂದ ಇಳಿದು ಹೋಗುತ್ತಿದ್ದಾಗ ದಿಢೀರ್ ಕುಸಿದುಬಿದ್ದರು. ಈ ವೇಳೆ ಅಲ್ಲಿಯೇ ಇದ್ದ ವೈದ್ಯರಾದ ರಮೇಶ್ ಬಾಬು ಅವರು ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಯು.ಟಿ. ಖಾದರ್ ಅವರ ಸಮಯಪ್ರಜ್ಞೆ:
ಸಂತೋಷ್ ಹೆಗ್ಡೆ ಅವರು ಕುಸಿದುಬಿದ್ದ ಸಂದರ್ಭದಲ್ಲಿ ಸ್ಥಳದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ. ತಡ ಮಾಡುವುದು ಅಪಾಯ ಎಂದು ಭಾವಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು, ತಮ್ಮ ಅಧಿಕೃತ ಸರ್ಕಾರಿ ವಾಹನದಲ್ಲೇ ಸಂತೋಷ್ ಹೆಗ್ಡೆ ಅವರನ್ನು ಮಿಲರ್ಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಕರೆತಂದರು. 'ಸಂತೋಷ್ ಹೆಗ್ಡೆ ಅವರಿಗೆ ವಾಂತಿಯಾಗಿ ಕುಸಿದುಬಿದ್ದಾಗ ತಕ್ಷಣ ಆಸ್ಪತ್ರೆಗೆ ಸೇರಿಸುವುದು ಅನಿವಾರ್ಯವಾಗಿತ್ತು. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರಾಮವಾಗಿದ್ದಾರೆ' ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಆಸ್ಪತ್ರೆಯ ಅಧಿಕೃತ ಮಾಹಿತಿ:
ಮಣಿಪಾಲ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ರುದ್ರೇಶ್ ಅವರು ಸಂತೋಷ್ ಹೆಗ್ಡೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. 'ನ್ಯಾಯಮೂರ್ತಿಗಳು ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದಾರೆ. ಅವರಿಗೆ ಯಾವುದೇ ಗಂಭೀರವಾದ ಹೃದಯಾಘಾತ ಸಂಭವಿಸಿಲ್ಲ. ಕೇವಲ ಸುಸ್ತಾಗಿದ್ದರಿಂದ ಗಡ್ಡಿನೆಸ್ (ತಲೆಸುತ್ತು) ಉಂಟಾಗಿ ಕುಸಿದುಬಿದ್ದಿದ್ದರು. ವಿಶೇಷವೆಂದರೆ, ಇಂದು ಬೆಳಿಗ್ಗೆಯಷ್ಟೇ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ (Regular Checkup) ಆಸ್ಪತ್ರೆಗೆ ಬಂದಿದ್ದರು. ಅವರ ಬಿಪಿ ಮತ್ತು ಶುಗರ್ ಎಲ್ಲವೂ ನಾರ್ಮಲ್ ಇದೆ. ಮುಂದಿನ 30 ನಿಮಿಷಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು' ಎಂದು ವೈದ್ಯರು ತಿಳಿಸಿದ್ದಾರೆ.
ಕುಟುಂಬಸ್ಥರು ಹಾಜರಿ
ಸದ್ಯ ಆಸ್ಪತ್ರೆಯಲ್ಲಿ ಸಂತೋಷ್ ಹೆಗ್ಡೆ ಅವರ ಕುಟುಂಬಸ್ಥರು ಹಾಜರಿದ್ದು, ಅವರಿಗೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ನಾಡಿನ ಒಬ್ಬ ಪ್ರಾಮಾಣಿಕ ನಿವೃತ್ತ ನ್ಯಾಯಮೂರ್ತಿಗಳು ಸುರಕ್ಷಿತವಾಗಿದ್ದಾರೆ ಎಂಬ ಸುದ್ದಿ ಕೇಳಿ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

