ಇಂದಿನಿಂದ 3 ದಿನ ಮಳೆ; ಈ ಭಾಗದಲ್ಲಿ ಯೆಲ್ಲೋ ಅಲರ್ಟ್; ಮನೆಯಿಂದ ಹೊರ ಹೋಗುವಾಗ ಕೈಯಲ್ಲಿರಲಿ ಛತ್ರಿ!
Karnataka Summer Rain: ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರದಲ್ಲಿ ಮಳೆಯಿಂದ ಬಾಳೆ ಬೆಳೆ ನಾಶವಾಗಿದೆ.

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದೆ.
ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ, ದಕ್ಷಿಣಕನ್ನಡ ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಸಾಧ್ಯತೆಗಳಿವೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು, ನಾಳೆ ಮಳೆ ಹಗುರದಿಂದ ಸಾಧರಣ ಮಳೆ ಸಾಧ್ಯತೆಗಳಿವೆ. ಗುರುವಾರ ಬೆಳಗ್ಗೆಯಿಂದಲೇ ರಾಜಧಾನಿಯಲ್ಲಿ ಮಳೆ ಶುರುವಾಗಿತ್ತು. ಗುರುವಾರದ ಮಳೆಯಿಂದಾಗಿ ರಾಜಧಾನಿಯಲ್ಲಿ ಬಿಸಿಲಿನ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗಿದೆ.
ನೆಲಕಚ್ಚಿದ ಬಾಳೆ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಾಗಾಣಿ ಗ್ರಾಮದ ವ್ಯಾಪ್ತಿಯಲ್ಲಿ ತಡರಾತ್ರಿ ಸುರಿದ ಮಳೆಗೆ ಬಾಳೆ ಬೆಳೆ ನಾಶವಾಗಿದೆ. ಹೊಸೂರು ಮಗಾಣಿಯ ರಾಂಪುರ ಮಾರುತಿ ಎಂಬವರಿಗೆ ಸೇರಿದ ಸರಿ ಸುಮಾರು 3-4 ಲಕ್ಷಕ್ಕೂ ಮೌಲ್ಯದ ಬಾಳೆ ನಾಶವಾಗಿದೆ. ಕಳೆದ ಬಾರಿ ಬೆಳೆ ಹಾನಿಯಾದಾಗ ಅಧಿಕಾರಿಗಳು ಶಾಸಕರು ಬಂದ್ರು, ಆದ್ರೆ ನಮಗೆ ಒಂದು ರೂಪಾಯಿ ಪರಿಹಾರ ನೀಡಲಿಲ್ಲ. ಈ ಬಾರಿಯೂ ಪರಿಹಾರ ಸಿಗುತ್ತೋ ಇಲ್ವೋ ಗೊತ್ತಿಲ್ಲ ಎಂದು ರೈತರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ