ಪ್ರತಿಭಟನೆಗೆ ಸೀಮಿತವಾದ ಬಂದ್: ಉತ್ತರ ಕರ್ನಾಟಕದಲ್ಲಿ ನೀರಸ ಪ್ರತಿಕ್ರಿಯೆ
ಬೆಂಗಳೂರು(ಡಿ.05): ಕರ್ನಾಟಕ ಬಂದ್ಗೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್ ಕೇವಲ ಪ್ರತಿಭಟನೆಗಳಿಗೆ ಮಾತ್ರ ಸೀಮಿತವಾಗಿದೆ. ಯಾವ ಜಿಲ್ಲೆಯಲ್ಲಿಯೂ ಕೂಡ ಬಂದ್ ಮಾಡಿಲ್ಲ. ಹೀಗಾಗಿ ಇಂದಿನ ಕರ್ನಾಟಕ ಬಂದ್ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಧಾರವಾಡದಲ್ಲಿ ಬಂದ್ ಹಿನ್ನೆಲೆಯಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಶಾಸಕ ಅರವಿಂದ ಬೆಲ್ಲದ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಹನ ಸಂಚಾರಕ್ಕೆ ಅಡೆತಡೆ ಆಗದಂತೆ ಕೆಲ ನಿಮಿಷಗಳು ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ನಂತರ ಪ್ರತಿಭಟನೆ ಮುಗಿಸುವಂತೆ ಪೊಲೀಸರು ಮನವಿ ಮಾಡಿದರೂ ಕೇಳದೆ, ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು. ಪ್ರತಿಭಟನೆಗೆ ಹೆಚ್ಚು ಕಾಲ ಅವಕಾಶ ನೀಡದ ಕಾರಣ ರಸ್ತೆ ತಡೆಗೆ ಮುಂದಾದರು. ಕೂಡಲೇ ಎಚ್ಚೆತ್ತ ಪೊಲೀಸರು 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಂದ್ ಹಿನ್ನೆಲೆಯಲ್ಲಿ ಎಂದಿನಂತೆ ಜನಜೀವನ ಸಾಗಿದೆ. ನಗರದ ಪ್ರಮುಖ ಸರ್ಕಲ್ಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕ ಸಂಗ್ರಾಮಸೇನೆ ಅಧ್ಯಕ್ಷ ಸಂಜೀವ ಧುಮಕನಾಳ ಅವರು ಚೆನ್ನಮ್ಮ ಸರ್ಕಲ್ನಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ಸಂಘಟನೆಯ ಕಾರ್ಯಕರ್ತರು ಬೆಂಬಲ ಸೂಚಿಸಿಲ್ಲ. ಹೀಗಾಗಿ ಸಂಜೀವ ಧುಮಕನಾಳ ಏಕಾಂಗಿ ಹೋರಾಟ ನಡೆಸಿದ್ದಾರೆ. ನಗರದಲ್ಲಿ ಬಸ್ ಆಟೋ ಸೇರಿದಂತೆ ಎಂದಿನಂತೆ ಸಂಚಾರ ಇದೆ.
ಕಲಬುರಗಿಯಲ್ಲಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ಅಣಕು ಶವ ಯಾತ್ರೆಗೆ ಮುಂದಾದಾಗ ಪೊಲೀಸರು ಮಧ್ಯ ಪ್ರವೇಶ ಮಾಡಿ ಅದದನ್ನು ತಡೆದರು, ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರದಲ್ಲಿ ಕರ್ನಾಟಕ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಈಶಾನ್ಯ ಸಾರಿಗೆ ಬಸ್ ಸಂಚಾರ ಎಂದಿನಂತೆ ಓಡಾಟ ನಡೆಸಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತೆ ನಡೆದಿದೆ. ಕೇವಲ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲು ಕರಾವೇ ನಿರ್ಧಾರ ಮಾಡಿದೆ. ಮುನ್ನೆಚ್ಚರಿಕೆಯಾಗಿ ಎಲ್ಲೆಡೆ ಬಿಗಿ ಪೋಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಗದಗ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗದಗ- ಹುಬ್ಬಳ್ಳಿ ರಸ್ತೆ ಬಂದ್ ಮಾಡಲು ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ಸಾರಿಗೆ ಸಂಸ್ಥೆಯ ಬಸ್ ತಡೆದು ಪ್ರತಿಭಟನೆ ನಡೆಸಿ ಆಕ್ರೋಶವನ್ನ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ನಂತರ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆಯಲ್ಲಿಯೂ ಕೂಡ ಯಾವುದೇ ಬಂದ್ ಇಲ್ಲ. ನಗರದಲ್ಲಿ ಎಂದಿನಂತೆ ಅಟೋ, ಟ್ಯಾಕ್ಸಿ ಸೇರಿದಂತೆ ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ನಡೆಸಿವೆ. ಎಂದಿನಂತೆ ಹೊಟೇಲ್ ಅಂಗಡಿ ಮುಂಗಟ್ಟುಗಳು ಆರಂಭವಾಗಿದ್ದು, ಎಂದಿನಂತೆ ಜನಜೀವನ ಸಾಗಿದೆ. ಬಂದ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಮರಾಠಾ ಅಭಿವೃದ್ಧಿ ಪ್ರಾಧಿಕಾರ ನಿಗಮ ವಿರೋಧಿಸಿ ಕನ್ನಡ ಪರ ಸಂಘಟನೆಯ ಕರ್ನಾಟಕ ಬಂದ್ಗೆ ಗುಮ್ಮಟನಗರಿ ವಿಜಯಪುರದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಜಿಲ್ಲಾದ್ಯಂತ ಎಂದಿನಂತೆ ಜನ ಜೀವನ ಆರಂಭವಾಗಿದ್ದು, ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಹಾಗೂ ಅಂಗಡಿ ಮುಂಗಟ್ಟು, ಅಟೋ ಎಂದಿನಂತೆ ಓಪನ್ ಆಗಿವೆ. ಇನ್ನೂ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.