Karnataka Rains: ರಾಜ್ಯದಲ್ಲಿ ಮುಂದಿನ ಮೂರು ದಿನ ಎಲ್ಲೆಲ್ಲಿ ಮಳೆ ಆರ್ಭಟ: ಇಲ್ಲಿದೆ ಮಾಹಿತಿ
ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗುಂಡ್ಲುಪೇಟೆಯಲ್ಲಿ ಈಗಾಗಲೇ ಮಳೆಯಿಂದಾಗಿ ಬಾಳೆ ಬೆಳೆಗಾರರಿಗೆ ಅಪಾರ ನಷ್ಟವಾಗಿದೆ.

ಮುಂದಿನ ಮೂರು ದಿನ ಮಳೆ
ಮುಂದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. Karnataka State Natural Disaster Monitoring Centre ಎಕ್ಸ್ ಖಾತೆಯಲ್ಲಿ ಮಳೆ ಮುನ್ಸೂಚನೆ ಮಾಹಿತಿ ಹಂಚಿಕೊಳ್ಳಲಾಗಿದೆ.
ಎಲ್ಲೆಲ್ಲಿ ಮಳೆ?
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮೇ 3ರಿಂದ ಮೇ 5ರವರೆಗೆ ಹಗುರ ಮಳೆಯಾಗುವ ನಿರೀಕ್ಷೆಗಳಿವೆ. ಮೇ 4 ಮತ್ತು ಮೇ 5ರಂದು ಇದೇ ಭಾಗದ ಕೆಲವು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕರ್ನಾಟಕ ಹವಾಮಾನ ವರದಿ
ಉತ್ತರ ಒಳನಾಡಿನ ಯಾದಗಿರಿ, ಬೀದರ್ ಮತ್ತು ಕಲಬುರಗಿಯ ಕೆಲವು ಭಾಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಪ್ರದೇಶದಲ್ಲಿ ಉಷ್ಣಾಂಶದಲ್ಲಿ ಕೊಂಚ ಏರಿಕೆಯಾಗಲಿದೆ ಎಂದು ಅನುಮಾನಿಸಲಾಗುತ್ತಿದೆ. ಇನ್ನುಳಿದಂತೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹಗುರ ಮಳೆಯ ಸಾಧ್ಯತೆಗಳಿವೆ.
Bengaluru: ಬಿರುಗಾಳಿ ಸಹಿತ ಮಳೆ ಮುನ್ಸೂಚನೆ
ಬೆಂಗಳೂರು ನಗರದಲ್ಲಿ ಮೇ 4ರ ವರೆಗೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಲ್ಕು ದಿನಗಳ ಕಾಲ ನಗರದಲ್ಲಿ ಭಾಗಶಃ ಮೋಡ ಕವಿತ ವಾತಾವರಣ ಇರಲಿದೆ. ಗುಡುಗು, ಮಿಂಚಿನೊಂದಿಗೆ ಹಗುರ ಮತ್ತು ಸಾಧಾರಣ ಮಳೆಯಾಗಲಿದೆ. ಇದೇ ವೇಳೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ, ಹೆಚ್ಚು ಉಷ್ಣಾಂಶ: ಐಎಂಡಿ
ಈ ಬಾರಿಯ ಮೇ ತಿಂಗಳಲ್ಲಿ ಭಾರತದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುವ ನಿರೀಕ್ಷೆ ಇದೆ. ಮೇ 14-16ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ
ಹಿಮಾಲಯದ ತಪ್ಪಲು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್, ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ಇರಲಿದೆ. ಇನ್ನು ಈಶಾನ್ಯ ಭಾರತ, ಮಧ್ಯ ಭಾರತದ ಹಲವು ಪ್ರದೇಶಗಳು ಹಾಗೂ ದಕ್ಷಿಣ ಭಾರತಕ್ಕೆ ಹೊಂದಿಕೊಂಡಿರುವ ಪ್ರದೇಶಗಳು, ಈಶಾನ್ಯ ಭಾರತದ ಕೆಲ ದಕ್ಷಿಣ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಲಿದೆ. ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತ ಹೊರತುಪಡಿಸಿ ಉಳಿದೆಡೆ ಮಳೆ ಪ್ರಮಾಣ ಸಾಮಾನ್ಯಕಿಂತ ಕೊಂಚ ಹೆಚ್ಚೇ ಇರಲಿದೆ ಎಂದು ಐಎಂಡಿ ಮಹಾ ನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ತಿಳಿಸಿದ್ದಾರೆ.
ನಾಲ್ಕೈದು ದಿನದ ಗಾಳಿ ಮಳೆಗೆ ಲಕ್ಷಾಂತರ ರು. ನಷ್ಟ
ಗುಂಡ್ಲುಪೇಟೆ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಸಿದ ಬಿರುಗಾಳಿ ಮತ್ತು ಮಳೆಯ ಆರ್ಭಟಕ್ಕೆ ತಾಲೂಕಿನ ನಾನಾ ಹಳ್ಳಿಗಳಲ್ಲಿ ಹಲವು ರೈತರು ಬೆಳೆದ ಸಹಸ್ರಾರು ಬಾಳೆ ಗಿಡ ನೆಲಸಮವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ತಾಲೂಕಿನ ಬೇರಂಬಾಡಿ, ಹುಂಡೀಪುರ, ಚೌಡಹಳ್ಳಿ, ಹಂಗಳ, ಮಜಕ, ಬೊಮ್ಮಲಾಪುರದಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಬಾಳೆ ನೆಲಸಮವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

