- Home
- News
- State
- ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ ಗಣನೀಯ ಏರಿಕೆ, ಈ ಬಾರಿ ವಾಡಿಕೆಗಿಂತ 3ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ!
ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ ಗಣನೀಯ ಏರಿಕೆ, ಈ ಬಾರಿ ವಾಡಿಕೆಗಿಂತ 3ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ!
ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ ಗಣನೀಯವಾಗಿ ಏರುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಹೆಚ್ಚಳದ ಮುನ್ಸೂಚನೆ ಇದೆ. ಮಾರ್ಚ್-ಏಪ್ರಿಲ್ನಲ್ಲಿ ತೀವ್ರ ಬಿಸಿಲಿನ ಎಚ್ಚರಿಕೆ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಅವಧಿಯಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಬಹುತೇಕ ಜಿಲ್ಲೆಗಳು ಬಿರುಬಿಸಿಲಿನ ತೀವ್ರತೆಯಿಂದ ಬಳಲುತ್ತಿವೆ. ಪ್ರತಿದಿನವೂ ಸರಾಸರಿ ಒಂದು ಡಿಗ್ರಿಯಷ್ಟು ತಾಪಮಾನ ಏರಿಕೆಯಾಗುತ್ತಿದ್ದು, ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಎರಡೂ ಹೆಚ್ಚುತ್ತಿರುವುದು ಹವಾಮಾನ ಇಲಾಖೆಯ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ಬೆಂಗಳೂರುನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬಳ್ಳಾರಿಯಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ತುಮಕೂರು, ಚಿತ್ರದುರ್ಗ, ಕಾರವಾರ, ರಾಯಚೂರು, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್–ಏಪ್ರಿಲ್ನಲ್ಲಿ ತೀವ್ರ ಬಿಸಿಲಿನ ಎಚ್ಚರಿಕೆ
ಹವಾಮಾನ ತಜ್ಞರ ಪ್ರಕಾರ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಾಡಿಕೆಯಿಗಿಂತ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚುವರಿ ತಾಪಮಾನ ದಾಖಲಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ರಾಯಚೂರು, ಬಳ್ಳಾರಿ, ಕಲಬುರ್ಗಿ, ಯಾದಗಿರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ 43ರಿಂದ 45 ಡಿಗ್ರಿ ಸೆಲ್ಸಿಯಸ್ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 39–40 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದ್ದು, ಕರಾವಳಿ ಭಾಗಗಳಲ್ಲೂ 40 ಡಿಗ್ರಿ ಸೆಲ್ಸಿಯಸ್ಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ
ಈ ಬಾರಿ ವಾಡಿಕೆಯಿಗಿಂತ ಅಧಿಕ ತಾಪಮಾನ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಬೆಂಗಳೂರಿನ 21 ಪ್ರದೇಶಗಳನ್ನು ‘ಹೈ ರಿಸ್ಕ್ ಏರಿಯಾ’ಗಳಾಗಿ ಗುರುತಿಸಲಾಗಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಈ ಪ್ರದೇಶಗಳನ್ನು ಜಲಮಂಡಳಿ ಗುರುತಿಸಿದ್ದು, ಹಳೆ ಗುಡ್ಡದಳ್ಳಿ, ಬಾಪೂಜಿ ನಗರ, ಮೈಸೂರು ರಸ್ತೆ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಡಿಜೆ ಹಳ್ಳಿ, ದೇವಿ ನಗರ, ಗೆದ್ದಲಹಳ್ಳಿ, ನಾರಾಯಣಪುರ ಕಾಲೋನಿ, ಬಂಡೆಪಾಳ್ಯ, ಚಾಮರಾಜಪೇಟೆ, ರಾಗಿಗುಡ್ಡ, ಹೊಸಕೆರೆಹಳ್ಳಿ ಸೇರಿದಂತೆ ಒಟ್ಟು 21 ಏರಿಯಾಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಹೈ ರಿಸ್ಕ್ ಪ್ರದೇಶಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದ್ದು, ಅಲ್ಲಲ್ಲಿ ಚಿಕ್ಕ ಟ್ಯಾಂಕರ್ಗಳ ಅಳವಡಿಕೆಗೂ ತೀರ್ಮಾನಿಸಲಾಗಿದೆ. ಜೊತೆಗೆ ಟ್ಯಾಂಕರ್ ಮಾಫಿಯಾಗಳ ಚಟುವಟಿಕೆಗಳ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಸಿಲಿನ ನಡುವೆ ಮಳೆಯ ಮುನ್ಸೂಚನೆ
ಇನ್ನೊಂದೆಡೆ, ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗಿದ್ದರೂ ಫೆಬ್ರವರಿ 26ರವರೆಗೆ ಕೆಲ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮುಖ್ಯಸ್ಥ ಹಾಗೂ ವಿಜ್ಞಾನಿ ಡಾ. ಎನ್. ಪುವಿಯರಸನ್ ಅವರ ಪ್ರಕಾರ, ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಒಣಹವೆ ಹೆಚ್ಚಾಗಿದ್ದರೂ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಒಂದೆರಡು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ತಿಳಿಸಿದ್ದಾರೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಹ ಒಣಹವೆ ಪ್ರಾಬಲ್ಯ ಮುಂದುವರಿಯಲಿದೆ.
ಚಂಡಮಾರುತಗಳ ಮೇಲ್ವಿಚಾರಣೆ
ಹಿಂದೂ ಮಹಾಸಾಗರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶಗಳು ನಿರ್ಮಾಣವಾಗಿದ್ದು, ಅವುಗಳ ಚಲನವಲನವನ್ನು ಹವಾಮಾನ ಇಲಾಖೆ ನಿಗಾ ವಹಿಸಿದೆ. ಈ ವಾಯು ಚಂಡಮಾರುತಗಳ ಪರಿಣಾಮ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದ್ದು, ರಾಜ್ಯದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ. ಒಟ್ಟಾರೆ, ರಾಜ್ಯದಲ್ಲಿ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲು, ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಗಳ ನಡುವೆ ಜನಜೀವನ ಸವಾಲುಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

