ತಮಿಳುನಾಡಲ್ಲಿ 60 ಸೀಟು ಕೇಳಿದ್ದ ಬಿಜೆಪಿಗೆ 20 ಸೀಟು| ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಸ್ಪರ್ಧೆ| ಎಐಎಡಿಎಂಕೆ-ಬಿಜೆಪಿ ಸೀಟು ಹಂಚಿಕೆ ಅಂತಿಮ

ಚೆನ್ನೈ(ಮಾ.07): ತಮಿಳುನಾಡಿನಲ್ಲಿ ಏ.6ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟದ ನಡುವಣ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಹಿಂದೆ 60 ಕ್ಷೇತ್ರಕ್ಕೆ ಬಿಜೆಪಿ ಬೇಡಿಕೆ ಇಟ್ಟಿತ್ತು. ಆದರೆ ಕೇವಲ 20 ಕ್ಷೇತ್ರಗಳನ್ನು ಮಾತ್ರ ಎಐಎಡಿಎಂಕೆ ಬಿಟ್ಟುಕೊಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಎಐಎಡಿಎಂಕೆ ಘೋಷಿಸಿದೆ. ಈ ಬೆನ್ನಲ್ಲೇ ಕಳೆದ ಬಾರಿ ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ವಸಂತ ಕುಮಾರ್‌ ವಿರುದ್ಧ ಪರಾಭವಗೊಂಡಿದ್ದ ಮಾಜಿ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌Ü ಅವರನ್ನೇ ಈ ಬಾರಿ ಕನ್ಯಾಕುಮಾರಿಯಿಂದ ಕಣಕ್ಕಿಳಿಸುವುದಾಗಿ ಬಿಜೆಪಿ ಘೋಷಿಸಿದೆ.

ಸೀಟು ಹಂಚಿಕೆ ಸಂಬಂಧ ಕಳೆದೊಂದು ವಾರದಿಂದ ಉಭಯ ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದ್ದು, ಶುಕ್ರವಾರ ರಾತ್ರಿ ಒಪ್ಪಂದ ಅಂತಿಮಗೊಂಡಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ್‌ ಸೇಲ್ವಂ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ.ರವಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಎಲ್‌.ಮುರುಗನ್‌ ಅವರ ಸಮ್ಮುಖ ಒಪ್ಪಂದ ಮಾಡಿಕೊಳ್ಳಲಾಗಿದೆ.

ಒಟ್ಟು 234 ಕ್ಷೇತ್ರಗಳ ಪೈಕಿ ಎಐಎಡಿಎಂಕೆ 170 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ.