ಅಮಿತ್ ಶಾ ಸಂಧಾನಕ್ಕೂ ಬಗ್ಗದ ರೈತರು| ಕಾಯ್ದೆ ರದ್ದಿಗೆ ಸರ್ಕಾರ ನಕಾರ/ ತಿದ್ದುಪಡಿ ಕುರಿತು ಲಿಖಿತ ಭರವಸೆಯ ಘೋಷಣೆ| ಇಂದು ರೈತರಿಗೆ ಸರ್ಕಾರದ ಪ್ರಸ್ತಾಪ ಸಲ್ಲಿಕೆ/ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ
ನವದೆಹಲಿ(ಡಿ.09): ಕೃಷಿ ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮನವೊಲಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಯತ್ನಗಳು ಫಲ ಕೊಟ್ಟಿಲ್ಲ. ಇದರೊಂದಿಗೆ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತಷ್ಟುವಿಸ್ತರಣೆಗೊಳ್ಳುವ ಸಾಧ್ಯತೆಗಳು ಕಂಡುಬಂದಿವೆ.
ಮಂಗಳವಾರ ಭಾರತ್ ಬಂದ್ ಮುಕ್ತಾಯವಾದ ಬೆನ್ನಲ್ಲೇ, ರಾತ್ರಿ 8 ಗಂಟೆಯಿಂದ ಸುಮಾರು 3 ತಾಸುಗಳ ಕಾಲ 13 ರೈತ ಮುಖಂಡರೊಂದಿಗೆ ಅಮಿತ್ ಶಾ ಸುದೀರ್ಘ ಮಾತುಕತೆ ನಡೆಸಿದರು. ಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡಾ ಹಾಜರಿದ್ದರು.
ಮಾತುಕತೆ ವೇಳೆ ಕಾಯ್ದೆ ರದ್ದುಪಡಿಸಲು ಸಾಧ್ಯವಿಲ್ಲ. ಆದರೆ ರೈತರ ಕಳವಳಕ್ಕೆ ಕಾರಣವಾಗಿರುವ ಕೆಲ ಅಂಶಗಳ ತಿದ್ದುಪಡಿಗೆ ಸರ್ಕಾರ ಸಿದ್ಧವಿದೆ. ಏನೆಲ್ಲಾ ತಿದ್ದುಪಡಿ ಮಾಡಲಾಗುವುದು ಎಂಬುದರ ಬಗ್ಗೆ ಲಿಖಿತವಾಗಿಯೇ ಭರವಸೆ ನೀಡಲಾಗುವುದು ಎಂದು ಅಮಿತ್ ಶಾ ರೈತ ಮುಖಂಡರಿಗೆ ಭರವಸೆ ನೀಡಿದರು.
ಆದರೆ ತಿದ್ದುಪಡಿಗೆ ಒಪ್ಪದ ರೈತ ಮುಖಂಡರು, ಸಂಪೂರ್ಣವಾಗಿ ಕಾಯ್ದೆ ರದ್ದು ಹೊರತುಪಡಿಸಿ ಇನ್ಯಾವುದೇ ವಿಷಯ ನಮಗೆ ಒಪ್ಪಿತವಿಲ್ಲ ಎಂಬ ಹಠಕ್ಕೆ ಬಿದ್ದರು. ಹೀಗಾಗಿ ಯಾವುದೇ ಫಲ ಕಾಣದೇ ಸಭೆ ಮುಕ್ತಾಯವಾಯಿತು.
ಸಭೆಯ ಬಳಿಕ ಮಾತನಾಡಿದ ರೈತ ಮುಖಂಡ ಹನ್ನನ್ ಮೊಲ್ಲಾ, ಕಾಯ್ದೆ ರದ್ದುಪಡಿಸಲು ಸರ್ಕಾರ ಸಿದ್ಧವಿಲ್ಲ ಎಂದು ಸಚಿವ ಅಮಿತ್ ಶಾ ಸಭೆಗೆ ತಿಳಿಸಿದ್ದಾರೆ. ಹೀಗಾಗಿ ನಾವು ನಾಳೆ ಆಯೋಜನೆಗೊಂಡಿದ್ದ ಸಭೆಯನ್ನು ಬಹಿಷ್ಕರಿಸಲಿದ್ದೇವೆ. ಸರ್ಕಾರ ನಮಗೆ ಅದರ ಪ್ರಸ್ತಾಪಗಳನ್ನು ರವಾನಿಸಲಿದೆ. ಅದನ್ನು ನೋಡಿಕೊಂಡು ನಾವು ಇತರೆ ರೈತರ ಜೊತೆ ಮಾತುಕತೆ ನಡೆಸಿ ಮುಂದಿನ ಹೋರಾಟದ ಹಾದಿ ನಿರ್ಧರಿಸಲಿದ್ದೇವೆ ಎಂದು ತಿಳಿಸಿದ್ದಾರೆ.
6ನೇ ಸುತ್ತಿನ ಸಭೆ ಬಗ್ಗೆ ಅನುಮಾನ
ನವದೆಹಲಿ: ಬುಧವಾರ ಇಲ್ಲಿ ಆಯೋಜನೆಗೊಂಡಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ 6ನೇ ಸುತ್ತಿನ ಮಾತುಕತೆ ನಡೆಯುವ ಬಗ್ಗೆ ಅನುಮಾನ ಮೂಡಿವೆ. ಮಂಗಳವಾರ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ರೈತ ಮುಖಂಡರು ಬುಧವಾರದ ಸಭೆಯಲ್ಲಿ ಭಾಗಿಯಾಗದೇ ಇರುವ ನಿರ್ಧಾರ ಪ್ರಕಟಿಸಿದ್ದರೆ ಇನ್ನು ಕೆಲವರು ಭಾಗಿಯಾಗುವ ಸುಳಿವು ನೀಡಿದ್ದಾರೆ. ರೈತರ ಕಳವಳಕ್ಕೆ ಕಾರಣವಾಗಿರುವ ಕನಿಷ್ಠ ಬೆಂಬಲ ಬೆಲೆ, ಮಂಡಿ ವ್ಯವಸ್ಥೆ ಕುರಿತಾದ ಅಂಶಗಳ ತಿದ್ದುಪಡಿ ಮಾಡುವ ಅಮಿತ್ ಶಾ ಸುಳಿವು ನೀಡಿದ್ದಾರೆ. ಹೀಗಾಗಿ ಚರ್ಚೆಯಲ್ಲಿ ಭಾಗಿಯಾಗುವುದಾಗಿ ಹೇಳಿಕೊಂಡಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 9, 2020, 10:40 AM IST