ಜನವರಿ 26ಕ್ಕೆ ಅಯೋಧ್ಯೆ ಮಸೀದಿ ನಿರ್ಮಾಣ ಶುರು!
ಜನವರಿ 26ಕ್ಕೆ ಅಯೋಧ್ಯೆ ಮಸೀದಿ ನಿರ್ಮಾಣ ಶುರು| ಸಸಿ ನೆಟ್ಟು, ತ್ರಿವರ್ಣ ಧ್ವಜ ಹಾರಿಸಿ ಮಸೀದಿ ನಿರ್ಮಾಣಕ್ಕೆ ಚಾಲನೆ
ಲಖನೌ(ಜ.18): ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ದೇಶಾದ್ಯಂತ ದೇಣಿಗೆ ಸಂಗ್ರಹ ಅಭಿಯಾನ ಶುರುವಾಗಿರುವ ಬೆನ್ನಲ್ಲೇ, ಅಯೋಧ್ಯೆಯ ಪ್ರತ್ಯೇಕ ಸ್ಥಳದಲ್ಲಿ ನಿರ್ಮಾಣವಾಗಲಿರುವ ಮಸೀದಿ ಕಾಮಗಾರಿ ಗಣರಾಜ್ಯೋತ್ಸವದ ದಿನವಾದ ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಿ ಮತ್ತು ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಸುಪ್ರೀಂ ಕೋರ್ಟ್ ತೀರ್ಪಿನಂತೆ ಅಯೋಧ್ಯೆಯ 5 ಎಕರೆ ಜಮೀನಿನಲ್ಲಿ ಮಸೀದಿ ನಿರ್ಮಾಣದ ಹೊಣೆ ಹೊತ್ತಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್, ಜನವರಿ 26ರ ಬೆಳಗ್ಗೆ 8.30ಕ್ಕೆ ಶಿಲಾನ್ಯಾಸ ನೆರವೇರಿಸಲು ಮುಂದಾಗಿದೆ. ಭೂಮಿಗೆ ಆಪತ್ತು ಆಗಿ ಪರಿವರ್ತನೆಯಾಗಿರುವ ಜಾಗತಿಕ ತಾಪಮಾನದ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಸಿಗಳನ್ನು ನೆಡುವ ಮೂಲಕ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಜೊತೆಗೆ ಮಸೀದಿಯ ಜೊತೆಗೆ ಆಸ್ಪತ್ರೆ, ವಸ್ತು ಸಂಗ್ರಹಾಲಯ, ಗ್ರಂಥಾಲಯ, ಸಮುದಾಯ ಅಡುಗೆ ಮನೆ, ಭಾರತೀಯ-ಇಸ್ಲಾಮಿಕ ಸಾಂಸ್ಕೃತಿಕ ಸಂಶೋಧನಾ ಕೇಂದ್ರ, ಮುದ್ರಣಾಲಯ ನಿರ್ಮಾಣಕ್ಕೆ ಅನುಮತಿ ಪಡೆಯಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.